ಬೆಂಗಳೂರು: ‘ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ನಾಗರಿಕರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಪ್ರಮಾಣೀಕೃತ ಕಾರ್ಯವಿಧಾನವೊಂದನ್ನು (ಎಸ್ಒಪಿ) ಸಿದ್ಧಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಈ ಕುರಿತಂತೆ ಹೈಕೋರ್ಟ್ ವಕೀಲ ಎಲ್.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದ್ದು ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.
‘ನೀರಿನ ಮೂಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಹೋದರೆ ನೀರು ಕಲುಷಿತವಾಗುತ್ತದೆ ಎಂಬ ಅರ್ಜಿದಾರರ ವಾದ ಸಮಂಜಸವಾಗಿದೆ’ ಎಂದು ಸಹಮತ ವ್ಯಕ್ತಪಡಿಸಿರುವ ನ್ಯಾಯಪೀಠ, ‘ಮಾನವರ ಬಳಕೆಗೆ ಯೋಗ್ಯವಾದ ಕುಡಿಯುವ ನೀರನ್ನು ಪೂರೈಸುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ’ ಎಂಬುದನ್ನು ಸ್ಪಷ್ಟಪಡಿಸಿದೆ.
‘ನೀರು ಸರಬರಾಜಿನ ಮೂಲಸೌಕರ್ಯ ವ್ಯವಸ್ಥೆಯಲ್ಲಿ; ಶುದ್ಧೀಕರಣ ಘಟಕಗಳು, ಭೂಗತ ಮತ್ತು ಓವರ್ ಹೆಡ್ ಟ್ಯಾಂಕ್ಗಳು, ಪೈಪ್ಲೈನ್ಗಳು, ಬೋರ್ವೆಲ್ಗಳು ಮತ್ತು ರಿವರ್ಸ್ ಆಸ್ಮೋಸಿಸ್ (ಆರ್ಒ) ಸ್ಥಾವರಗಳು ಒಳಗೊಂಡಿವೆ. ಈ ಎಲ್ಲಾ ಸೌಲಭ್ಯಗಳಿಗೆ ಸಕಾಲಿಕ ಮತ್ತು ವೈಜ್ಞಾನಿಕ ನಿರ್ವಹಣೆಯ ಅಗತ್ಯವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
‘ಸೌಲಭ್ಯಗಳ ನಿರ್ವಹಣೆಗಾಗಿ ಎಸ್ಒಪಿ ಸಿದ್ಧಪಡಿಸಬೇಕು ಮತ್ತು ಈ ಆದೇಶ ಪ್ರಕಟಿಸಿದ ದಿನದಿಂದ ಎರಡು ತಿಂಗಳ ಒಳಗೆ ಎಸ್ಒಪಿಯನ್ನು, ಪರಿಶೀಲನೆಗಾಗಿ ಮತ್ತು ಆದೇಶ ಪಾಲನೆಯ ಮುಂದಿನ ಹೆಜ್ಜೆಯಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.
‘ತುಮಕೂರು ಸೇರಿದಂತೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪದೇ ಪದೇ ಎದುರಾಗುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಮತ್ತು ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.