ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಮತ್ತು ಇತರೆ 6 ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಆರ್.ಮಹಾದೇವನ್ ಅವರ ಪೀಠವು ತೀರ್ಪು ಕಾಯ್ದಿರಿಸಿದೆ.
‘ಆದೇಶ ಹೊರಡಿಸಿದ ರೀತಿ ನೋಡಿದರೆ ಇದು ಖುಲಾಸೆಗೊಳಿಸುವ ಪ್ರಕರಣ ಎಂದು ನ್ಯಾಯಾಲಯ ನಿರ್ಧರಿಸಿದಂತೆ ಕಾಣುತ್ತಿದೆ’ ಎಂದು ಕಟುವಾಗಿ ಟೀಕಿಸಿದೆ.
ಇದು ಪ್ರಾಥಮಿಕವಾಗಿ ವಿವೇಚನಾ ಅಧಿಕಾರದ ಮತಿಗೆಟ್ಟ ದುರುಪಯೋಗ ಎಂದಿರುವ ನ್ಯಾಯಪೀಠ, 2024ರ ಡಿಸೆಂಬರ್ 13ರ ತನ್ನ ಆದೇಶದಲ್ಲಿ ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಧಾರವೇನು ಎಂದು ಪ್ರಶ್ನಿಸಿರುವು ದನ್ನು ತೀವ್ರವಾಗಿ ಆಕ್ಷೇಪಿಸಿದೆ.
‘ಹತ್ಯೆಯ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಆಧಾರವೇನು ಎಂಬುದನ್ನು ಉಲ್ಲೇಖಿಸಿಲ್ಲ ಎಂದು ಜಾಮೀನು ಆದೇಶದಲ್ಲಿ ಕಾರಣ ನೀಡಿರುವುದು ತೀವ್ರ ಆಕ್ಷೇಪಾರ್ಹವಾಗಿದೆ’ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.