ಸಿದ್ದರಾಮಯ್ಯ
ನವದೆಹಲಿ: ಯಾವುದೇ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಘೋಷಣೆಯು ಚುನಾವಣಾ ಅಕ್ರಮ ಹೇಗಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ.
2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿಗಳನ್ನು ಘೋಷಿಸಿದ್ದರಿಂದ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆದ್ದಿದ್ದಾರೆ ಎಂದು ಆರೋಪಿಸಿ ಕೆ.ಶಂಕರ್ ಎಂಬವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚಾರಣೆಯ ಆರಂಭದಲ್ಲೇ ಈ ಅರ್ಜಿ ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ಪ್ರಕಟಿಸಿತು. ಆಗ ಅರ್ಜಿದಾರರ ಪರ ವಕೀಲರು, ‘ಚುನಾವಣೆಗೆ ಮುನ್ನ ನೀಡಿದ ಭರವಸೆಗಳು ಚುನಾವಣಾ ಅಕ್ರಮವಾಗುತ್ತದೆಯೇ ಎಂಬ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇದೆ ಹಾಗೂ ಇಂತಹುದೇ ಇನ್ನೊಂದು ಪ್ರಕರಣದಲ್ಲಿ ಪ್ರತಿವಾದಿಗಳಿಗೆ ನ್ಯಾಯಪೀಠ ನೋಟಿಸ್ ನೀಡಿದೆ’ ಎಂದು ಗಮನ ಸೆಳೆದರು. ಆಗ ನ್ಯಾಯಪೀಠವು, ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿತು.
ಸಿದ್ದರಾಮಯ್ಯ ಅವರು ಚುನಾವಣಾ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.