
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಆನೆಗಳ ಹಿಂಡು
ನವದೆಹಲಿ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ಪ್ರದೇಶವನ್ನು (ಇಎಸ್ಝಡ್) ರಾಜ್ಯ ಸರ್ಕಾರ ಕಡಿಮೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 16ರಂದು ವಿಚಾರಣೆ ನಡೆಸಲಿದೆ.
ಪರಿಸರಕ್ಕೆ ಸಂಬಂಧಿಸಿದ ಸುಮಾರು 20 ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ‘ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಮಾರ್ಚ್ 16ರಂದು ಮಧ್ಯಾಹ್ನ ವಿಚಾರಣೆ ನಡೆಸಿ ಇತ್ಯರ್ಥ ಮಾಡಲಾಗುವುದು’ ಎಂದು ತಿಳಿಸಿತು.
ಬನ್ನೇರುಘಟ್ಟ ಇಎಸ್ಝಡ್ ವ್ಯಾಪ್ತಿಯನ್ನು 268 ಚದರ ಕಿ.ಮೀ.ನಿಂದ 168 ಚದರ ಕಿ.ಮೀ.ಗೆ ಇಳಿಸಿರುವ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಬೆಳ್ಳಿಯಪ್ಪ ಮತ್ತಿತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೇಂದ್ರ ಉನ್ನತಾಧಿಕಾರ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.
ಸಮಿತಿಯು ಸುಪ್ರೀಂ ಕೋರ್ಟ್ಗೆ ಜನವರಿ 7ರಂದು 524 ಪುಟಗಳ ವರದಿ ಸಲ್ಲಿಸಿತ್ತು. ಯಾವುದೇ ವೈಜ್ಞಾನಿಕ, ಪರಿಸರ ಅಥವಾ ಭೂದೃಶ್ಯ ಮಟ್ಟದ ಅಧ್ಯಯನ ಹಾಗೂ ಮೌಲ್ಯಮಾಪನ ನಡೆಸದೆಯೇ ಪರಿಸರ ಸೂಕ್ಷ್ಮ ಪ್ರದೇಶವನ್ನು ನಿರಂತರವಾಗಿ ಕಡಿತ ಮಾಡಲಾಗಿದೆ ಎಂದೂ ಸಮಿತಿ ವರದಿಯಲ್ಲಿ ಉಲ್ಲೇಖಿಸಿತ್ತು. ಸರ್ಕಾರದ ಕ್ರಮವನ್ನು ಸಿಇಸಿ ಕಟುವಾಗಿ ಟೀಕಿಸಿತ್ತು. ಈ ಕ್ರಮವು ಉದ್ಯಾನದ ಪರಿಸರ ವಿಜ್ಞಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅಭಿಪ್ರಾಯಪಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.