ADVERTISEMENT

ಏ. 22ರಂದು ದರ್ಶನ್‌ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2025, 23:33 IST
Last Updated 2 ಏಪ್ರಿಲ್ 2025, 23:33 IST
<div class="paragraphs"><p>ಏ. 22ರಂದು ದರ್ಶನ್‌ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌</p></div>

ಏ. 22ರಂದು ದರ್ಶನ್‌ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌

   

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ‌ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಏ.22ರಂದು ನಡೆಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ. 

ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ವಕೀಲ ಅನಿಲ್ ನಿಶಾನಿ ಅರ್ಜಿ ಸಲ್ಲಿಸಿದ್ದರು.

ADVERTISEMENT

ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ಜನವರಿ 24ರಂದು ನಿರಾಕರಿಸಿತ್ತು. ಆದರೆ, ಪ್ರಕರಣದ ಸಿಂಧುತ್ವ ಪ್ರಶ್ನಿಸುವ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿತ್ತು. ದರ್ಶನ್ ಹಾಗೂ ಇತರ ಆರೋಪಿಗಳಿಗೆ ನೋಟಿಸ್‌ ನೀಡಿತ್ತು. 

ಕರ್ನಾಟಕ ಸರ್ಕಾರದ ಪರವಾಗಿ ಅನಿಲ್ ಸಿ. ನಿಶಾನಿ ಅವರು ಬುಧವಾರ ಮಾಡಿದ ತುರ್ತು ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್‌. ಮಹದೇವನ್‌ ಅವರ ಪೀಠವು ಏಪ್ರಿಲ್ 22 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಪ್ರಮಾಣಪತ್ರ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಸಲ್ಲಿಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು. 22ರಂದು ಪ್ರಮಾಣಪತ್ರ ಸಲ್ಲಿಸುವಂತೆ ಪೀಠ ಸೂಚಿಸಿತು. 

2024ರ ಡಿಸೆಂಬರ್‌ 13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೂನ್ 8ರಂದು ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.