ADVERTISEMENT

ಶಾಲೆಗಳನ್ನು ಆರಂಭಿಸುವ ಬಗ್ಗೆ ಆಗಸ್ಟ್‌ ನಂತರ ತೀರ್ಮಾನ: ಸಚಿವ ಸುರೇಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 6:56 IST
Last Updated 2 ಜುಲೈ 2020, 6:56 IST
ಎಸ್‌ ಸುರೇಶ್‌ ಕುಮಾರ್‌
ಎಸ್‌ ಸುರೇಶ್‌ ಕುಮಾರ್‌    

ತುಮಕೂರು: ಆಗಸ್ಟ್‌ ನಂತರ ಶಾಲೆಗಳ ಆರಂಭದ ಬಗ್ಗೆ ತೀರ್ಮಾನಿಸುತ್ತೇವೆ. ಮೊದಲಿಗೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳು ತದನಂತರ ಹಿರಿಯ ಪ್ರಾಥಮಿಕ, ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಆಲೋಚನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ನಗರದ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಲೆ ಆರಂಭದ ಬಗ್ಗೆ ಈಗಾಗಲೇ ಪೋಷಕರ ಅಭಿಪ್ರಾಯಗಳನ್ನು ಪಡೆಯಲಾಗುತ್ತಿದೆ. ಆ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಈ ಹಿಂದಿನ ವರ್ಷಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಹಾಜರಾತಿ ಶೇ 98.76, 98.68 ಹೀಗಿತ್ತು. ಪ್ರಸಕ್ತ ಪರೀಕ್ಷೆಯಲ್ಲಿ ಶೇ 98ರಷ್ಟು ಹಾಜರಾತಿ ಇದೆ. ಕೊರೊನಾ ಸೋಂಕಿನ ಭಯ ಇದ್ದರೂ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದರು.

ADVERTISEMENT

ಸಾರಿಗೆ, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಜತೆ ಸಮನ್ವಯದಿಂದ ಕೆಲಸ ಮಾಡಿವೆ. ಇದರ ಪರಿಣಾಮವೇ ಪರೀಕ್ಷೆ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.