ಉಡುಪಿ: ರಾಜ್ಯದಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಐಎಲ್ಐ ರೋಗದ ಲಕ್ಷಣಗಳನ್ನು ಹೊಂದಿರುವ 65 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಪರೀಕ್ಷೆಗೊಳಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ವ್ಯಾಧಿ, ಹೃದ್ರೋಗ ಸೇರಿದಂತೆ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹಾಗಾಗಿ, ವೃದ್ಧರ ರಕ್ಷಣೆಗೆ ಸರ್ಕಾರ ನಿರ್ಧರಿಸಿದೆ ಎಂದರು.
ಎರಡೂವರೆ ತಿಂಗಳ ಲಾಕ್ಡೌನ್ ಅವಧಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೋಂಕು ಹರಡುವಿಕೆ ಪ್ರಮಾಣವೂ ತಗ್ಗಿದೆ. ಮತ್ತೆ ಲಾಕ್ಡೌನ್ ಮುಂದುವರಿಸಿದರೆ ಸೋಂಕು ನಾಶವಾಗುವುದಿಲ್ಲ. ಹಾಗಾಗಿ, ಮತ್ತೆ ಜನಜೀವನ ಸಹಜಸ್ಥಿತಿಗೆ ತಲುಪಬೇಕು, ಜನರ ಜೀವವೂ ಉಳಿಯಬೇಕು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಸಡಿಲಿಸಿದೆ. ಮನೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನು ಮಾಡಲಾಗುತ್ತಿದೆ ಎಂದರು.
ಸೋಂಕು ಹರಡುವಿಕೆ ತಡೆಗೆ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ 10 ಲಕ್ಷ ಸೋಂಕಿತ ಪ್ರಕರಣಗಳು ಬಂದರೂ ನಿಭಾಯಿಸಲು ಸರ್ಕಾರ ಸಜ್ಜಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.