ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಲಾದ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿದ ಹೈಕೋರ್ಟ್, ‘ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡಲು ಸಾಧ್ಯವೇ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ಸರ್ಕಾರದ ನಡೆಯನ್ನು ಪ್ರಶ್ನಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್, ಅಖಿಲ ಭಾರತ ವೀರಶೈವ ಮಹಾಸಭೆಯ ಬಿ.ಆರ್.ಉದಯಶಂಕರ್ ಸೇರಿದಂತೆ 9 ಜನರು, ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಎಲ್ಲ ಅರ್ಜಿದಾರರ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ, ಅಶೋಕ ಹಾರನಹಳ್ಳಿ, ಜಯಕುಮಾರ್ ಎಸ್.ಪಾಟೀಲ್, ವಿವೇಕ್ ರೆಡ್ಡಿ, ಎಸ್.ಶ್ರೀರಂಗ ಮತ್ತು ಎಸ್.ಎಂ.ಚಂದ್ರಶೇಖರ್ ಅವರ ವಾದವನ್ನು ನ್ಯಾಯಪೀಠ ಆಲಿಸಿತು.
‘ಅರ್ಜಿದಾರರ ವಾದದಲ್ಲಿ ಹುರುಳಿರುವಂತಿದೆ. ಆದಾಗ್ಯೂ, ಎಲ್ಲ ಅರ್ಜಿದಾರರೂ ತಮ್ಮ ಅಭಿಪ್ರಾಯದ ಸಾರಾಂಶವನ್ನು ಲಿಖಿತ ರೂಪದಲ್ಲಿ ಸಲ್ಲಿಸಲಿ’ ಎಂದು ಸೂಚಿಸಿತು.
ಅರ್ಜಿದಾರರ ಪರ ವಕೀಲರು, ‘ಇದು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಲ್ಲ. ಅದರ ಹೆಸರಿನಲ್ಲಿ ನಡೆಸಲಾಗುತ್ತಿರುವ ಜನರ ಜಾತಿಗಣತಿ. ಜನಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಅದೇನಿದ್ದರೂ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಟ್ಟ ವಿಚಾರ. ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ಹೊಸ ಜಾತಿಗಳನ್ನು ಸೃಷ್ಟಿಸುತ್ತಿದ್ದು, ಇದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ’ ಎಂದು ಆಕ್ಷೇಪಿಸಿದರು.
‘ಜಾತಿಗಣತಿಯ ಅಂಕಿ ಅಂಶಗಳನ್ನು ಜಿಯೋ ಟ್ಯಾಗಿಂಗ್ ಮೂಲಕ ಆಧಾರ್ ಕಾರ್ಡ್ಗೆ ಲಿಂಕ್ ಮಾಡಲಾಗುತ್ತಿದೆ. ಇದು ಆಧಾರ್ ಕಾಯ್ದೆಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ, ರಾಜ್ಯ ಸರ್ಕಾರದ ಪರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ‘₹425 ಕೋಟಿ ವೆಚ್ಚ ಮಾಡಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಶಿಕ್ಷಕರು, ಆಶಾ ಕಾರ್ಯಕರ್ತೆಯರ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರದ ಕಲ್ಯಾಣ ಕಾರ್ಯಕ್ರಮ ಜಾರಿಗೆ ಅಂಕಿಅಂಶ ಸಂಗ್ರಹಿಸಲಾಗುತ್ತಿದ್ದು, ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ’ ಎಂದರು.
‘ಸರ್ಕಾರ ಜನಗಣತಿ ಮಾಡುತ್ತಿಲ್ಲ. ಕೇವಲ ಸಮೀಕ್ಷೆ ನಡೆಸುತ್ತಿದೆ. ಇದೇ ರೀತಿಯ ಪ್ರಕರಣದಲ್ಲಿ ಹಿಂದೆಯೂ ಮಧ್ಯಂತರ ತಡೆ ನೀಡಿಲ್ಲ. ಹೀಗಾಗಿ, ಯಾವುದೇ ಮಧ್ಯಂತರ ತಡೆ ನೀಡಬಾರದು’ ಎಂದು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಆಯೋಗದ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ಮತ್ತು ರಾಜ್ಯ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಿದ್ದರು.
ಈಗ ಸಮೀಕ್ಷೆ ನಡೆಸಲು ಅವಕಾಶ ನೀಡಿದರೆ ಅಂಕಿಅಂಶ ಸಂಗ್ರಹವಾಗುತ್ತದೆ. ಒಮ್ಮೆ ಸಂಗ್ರಹವಾದರೆ ಅದನ್ನು ಮರಳಿಸಲು ಸಾಧ್ಯವಿಲ್ಲ. ಮಧ್ಯಂತರ ತಡೆ ಬಗ್ಗೆ ವಾದ ಆಲಿಸುವುದಕ್ಕಿಂತ ಅಂತಿಮ ವಿಚಾರಣೆ ನಡೆಸುವುದೇ ಸೂಕ್ತವಿಭು ಬಖ್ರು ಮುಖ್ಯ ನ್ಯಾಯಮೂರ್ತಿ ಹೈಕೋರ್ಟ್
ಇಂದು ಮಧ್ಯಾಹ್ನ ಆದೇಶ
‘ಸಮೀಕ್ಷೆಗೆ ತಡೆ ನೀಡುವಂತೆ ಕೋರಲಾಗಿರುವ ಮಧ್ಯಂತರ ಮನವಿಯ ಕುರಿತು ಸೆ.23ರ (ಮಂಗಳವಾರ) ಮಧ್ಯಾಹ್ನ ಕೂಲಂಕಷ ವಿಚಾರಣೆ ನಡೆಸಿ ಆದೇಶ ಹೊರಡಿಸಲಾಗುವುದು’ ಎಂದು ಹೇಳಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
‘ಕೋರ್ಟ್ ಮಧ್ಯಪ್ರವೇಶಿಸಲ್ಲ ಎಂಬ ವಿಶ್ವಾಸವಿದೆ’
‘ಸಮೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ. ನಮ್ಮದು ಕಾನೂನುಬದ್ಧ ಸಾಂವಿಧಾನಿಕ ಸಂಸ್ಥೆ. ಯಾರೂ ನಮ್ಮ ಮೇಲೆ ಒತ್ತಡ ಹಾಕಲು ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಸಮೀಕ್ಷೆ ಮುಂದೂಡಿಕೆ ವದಂತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯ್ಕ್ ತಳ್ಳಿ ಹಾಕಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು ‘ಸಮೀಕ್ಷೆಯ ವಿಚಾರದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು. ‘ಸಮೀಕ್ಷೆ ಮುಂದೂಡುವ ವಿಚಾರವಾಗಿ ಕೆಲವರು ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಆಯೋಗವನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ದೂರುದಾರರು ಮಧ್ಯಂತರ ಆದೇಶಕ್ಕಾಗಿ ಮನವಿ ಮಾಡಿದ್ದಾರೆ.ನಾವು ಸಮೀಕ್ಷೆಯಲ್ಲಿ ಯಾವುದೇ ಹೊಸ ಜಾತಿ ಸೇರಿಸಿಲ್ಲ. ಜಾತಿ ಬಗ್ಗೆ ಪ್ರಾಮುಖ್ಯತೆ ಕೂಡ ನೀಡಿಲ್ಲ. ಹೀಗಾಗಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ಭಾವಿಸಿದ್ದೇವೆ’ ಎಂದರು.
ಸಮೀಕ್ಷೆ ಬಗ್ಗೆ ತಪ್ಪುಕಲ್ಪನೆ:
‘ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುತ್ತಿದ್ದೇವೆ. ನಾವು ಜಾತಿ ಗಣತಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಗಣತಿ ಇರುವುದರಿಂದ ಕೆಲವರು ನಾವು ಜಾತಿಗಣತಿ ಮಾಡುತ್ತಿದ್ದೇವೆ ಎಂದು ತಪ್ಪು ಕಲ್ಪನೆ ಮೂಡಿಸುತ್ತಿದ್ದಾರೆ. ಇದು ರಾಜಕೀಯ ವಿರೋಧ ಇರಬಹುದು ಅಥವಾ ತಪ್ಪುಕಲ್ಪನೆಯಿಂದ ಕೂಡಿರಬಹುದು’ ಎಂದರು. ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ: ‘ನಮ್ಮ ಸಮೀಕ್ಷೆ ಕುರಿತಂತೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಇದು ಏಳು ಕೋಟಿ ಜನರಿಗೆ ಮಾಡುವ ದ್ರೋಹ. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರ್ಟ್ ಮೊರೆ ಹೋಗಲಾಗುವುದು’ ಎಂದೂ ಅವರು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.