ADVERTISEMENT

ದೆಹಲಿ ನಂಟು: ರಾಜ್ಯದ ಸಾವಿರ ಮಂದಿ ಸಂಪರ್ಕಕ್ಕೆ

200 ಮಂದಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿ ಪರೀಕ್ಷೆಗೆ ರವಾನೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 21:24 IST
Last Updated 2 ಏಪ್ರಿಲ್ 2020, 21:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಗ್ ಜಮಾತ್ ಕೇಂದ್ರ ಕಚೇರಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರು ಹಾಗೂ ಅವರ ಸಂಪರ್ಕಕ್ಕೆ ಬಂದಿದ್ದವರು ಎನ್ನಲಾದ ರಾಜ್ಯದ ಸಾವಿರ ಮಂದಿಯನ್ನು ಸಂಪರ್ಕಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಅವರಲ್ಲಿ 200 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಅವರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಗಳನ್ನು ಪರೀಕ್ಷೆಗೆ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು, ಅವರ ಸಂಪರ್ಕಕ್ಕೆ ಬಂದಿದ್ದವರು ಹಾಗೂ ನಿಜಾಮುದ್ದೀನ್ ರೈಲು ನಿಲ್ದಾಣದಿಂದ ಅವರ ಜತೆಗೆ ಪ್ರಯಾಣಿಸಿದವರು ಸೇರಿದಂತೆ ಸುಮಾರು 1,500 ಮಂದಿಯ ಪಟ್ಟಿಯನ್ನು ಬುಧವಾರ ನೀಡಿತ್ತು. ಅದರ ಅನುಸಾರ ಗುರುವಾರ ರಾಜ್ಯದ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯ ನಡೆಸಿ, ತಪಾಸಣೆಗೆ ಒಳಪಡಿಸಿದ್ದಾರೆ. ಪತ್ತೆಯಾದವರನ್ನು ಕ್ವಾರಂಟೈನ್‌ ಕೇಂದ್ರಗಳಲ್ಲಿ ದಾಖಲಿಸಿಕೊಳ್ಳಲಾಗಿದೆ.

ADVERTISEMENT

‘ಪೊಲೀಸ್ ಹಾಗೂ ಕೇಂದ್ರ ಸರ್ಕಾರ ನೀಡಿದ ಮಾಹಿತಿ ಅನುಸಾರ ಸಾವಿರ ಮಂದಿಯನ್ನು ಸಂಪರ್ಕಿಸಲಾಗಿದೆ’ ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ ಹೊಸದಾಗಿ 15 ಪ್ರಕರಣ! ‌
ರಾಜ್ಯದಲ್ಲಿ ಗುರುವಾರ ಒಂದೇ ದಿನ 15 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ತಲುಪಿದೆ. ಬೀದರ್‌ನಲ್ಲಿ 10, ಮೈಸೂರಿನಲ್ಲಿ 2, ಬಳ್ಳಾರಿ, ಬಾಗಲಕೋಟೆ ಹಾಗೂ ಕಲಬುರ್ಗಿಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ. ಇವರಲ್ಲಿ ಬಹುತೇಕರು ದೆಹಲಿಯ ನಿಜಾಮುದ್ದೀನ್‌ಗೆ ಹೋಗಿ ಬಂದವರಾಗಿದ್ದಾರೆ.

ಗುರುವಾರ 1,150 ಮಂದಿ ಕ್ವಾರಂಟೈನ್‌ ಕೇಂದ್ರಗಳಿಗೆ ದಾಖಲಾಗಿದ್ದಾರೆ. 4,192 ಮಂದಿಯನ್ನು ಮನೆಯಲ್ಲಿಯೇ ಪ್ರತ್ಯೇಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.