ADVERTISEMENT

ಮುಂಜಾಗ್ರತಾ ಕ್ರಮ ವಹಿಸಿ, ಕೋವಿಡ್ ತಗ್ಗಿಸಿ: ಮುಖ್ಯಮಂತ್ರಿಗಳ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 14:25 IST
Last Updated 8 ಅಕ್ಟೋಬರ್ 2020, 14:25 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ, ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಒಗಳೊಂದಿಗೆ ಅವರು ವೀಡಿಯೋ ಸಂವಾದ ನಡೆಸಿದರು.

ಸಾಂಕ್ರಾಮಿಕ ರೋಗಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು ಮತ್ತು ಸಾಮಾಜಿಕ ಅಂತರವೇ ಮದ್ದು ಎಂಬುದನ್ನು ಜನರು ಅರಿಯಬೇಕು; ಮಾಸ್ಕ್ ಹಾಕದವರಿಗೆ ದಂಡ ವಿಧಿಸುವುದು ಅರಿವಿನ ಒಂದು ಭಾಗವೇ ಹೊರತು ಸರ್ಕಾರಕ್ಕೆ ಇದರಿಂದ ಬೇರೆ ಉದ್ದೇಶ ಇಲ್ಲ ಎಂಬುದನ್ನು ಜನತೆಗೆ ಮನಗಾಣಿಸಬೇಕು ಎಂದು ಅವರು ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.
ಜನ ಜಾಗೃತಿ ಮುಖಾಂತರ ಮುನ್ನೆಚ್ಚರಿಕೆಯೊಂದಿಗೆ ರೋಗ ತಡೆಯಲು ಸೂಕ್ತ ಕ್ರಮಕೈಗೊಳ್ಳಬೇಕಿದೆ. ಈ ಸಂಬಂಧ ಅಗತ್ಯಗಳಿದ್ದರೆ ಹಿಂಜರಿಯದೆ ನೇರವಾಗಿ ಹೇಳಿ; ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಪಡೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಕೋವಿಡ್ 19 ಸಂಬಂಧಿಸಿದ ಎಸ್.ಒ.ಪಿಗಳನ್ನು ಪಾಲಿಸಿ, ಮರಣ ಪ್ರಮಾಣ ಹೆಚ್ಚದಂತೆ ಕಾಳಜಿ ವಹಿಸಿ ಎಂದರು.

ADVERTISEMENT

ಕೋವಿಡ್ 19 ಪ್ರಕರಣಗಳು ಹೆಚ್ಚಾಗಿರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತುಲನಾತ್ಮಕ ಅಧ್ಯಯನದೊಂದಿಗೆ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಡೆತ್ ಆಡಿಟ್ ಬಗ್ಗೆ ಪರಿಶೀಲಿಸಿದ ಮುಖ್ಯ ಮಂತ್ರಿಗಳು ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ವಿಶೇಷ ತಂಡವನ್ನು ಕಳುಹಿಸಲು ಸೂಚಿಸಿದರು.
ಈ ಸಂಬಂಧ ಲೋಪಗಳನ್ನು ತಿದ್ದಿಕೊಂಡು ಎಲ್ಲರ ಸಹಕಾರದೊಂದಿಗೆ ರೋಗ ಪ್ರಮಾಣ ಮತ್ತು ಮರಣ ಪ್ರಮಾಣಕ್ಕೆ ಕಡಿವಾಣ ಹಾಕಲು ಸಭೆಯಲ್ಲಿ ಸೂಕ್ತ ನಿರ್ದೇಶನಗಳನ್ನು ಮುಖ್ಯಮಂತ್ರಿಗಳು ನೀಡಿದರು.

ಜಿಲ್ಲೆಗಳಲ್ಲಿ ಆರ್.ಎ.ಟಿ ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು ಎಂದು ಸೂಚಿಸಲಾಯಿತು. ಮನೆ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮುಖಾಂತರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ಮಾಡಬೇಕು ಹಾಗೂ ಆರೋಗ್ಯ ಕಿಟ್‍ಗಳನ್ನು ನೀಡಲು ಸೂಚಿಸಿದರು.
ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಲು ಸಮೀಕ್ಷೆ ಮಾಡಿ ತಪಾಸಣೆ ಕೈಗೊಳ್ಳಬೇಕು. ಆರ್‍ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಅನಿವಾರ್ಯ ಇದ್ದಲ್ಲಿ ಮಾತ್ರ ಆರ್.ಎ.ಟಿ ಪರೀಕ್ಷೆ ಮಾಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಆಸ್ಪತ್ರೆಗಳಲ್ಲಿ ದಾಖಲಾದ ನಂತರ 72 ಗಂಟೆಗಳೊಳಗೆ ಆಗಿರುವ ಮರಣಗಳ ಕಾರಣವನ್ನು ತಿಳಿಯಲು ಮರಣಗಳ ಆಡಿಟ್ ಮಾಡಬೇಕು. ರಾಜ್ಯದಲ್ಲಿ ಶೇ 50 ರಷ್ಟು ಮರಣಗಳು ಮೊದಲ 72 ಗಂಟೆಗಳಲ್ಲಿ ಆಗಿವೆ.
ಹಾಗಾಗಿ ಪರೀಕ್ಷೆಗಳನ್ನು ಮಾಡಿ ಸೋಂಕು ಪತ್ತೆ ಹಚ್ಚುವುದು ಅತಿ ಮುಖ್ಯ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು. ಕ್ಲಿನಿಕಲ್ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮೈಸೂರು ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು, ಮುಂದಿನ ಒಂದು ವಾರದೊಳಗೆ ಪ್ರತ್ಯೇಕ ವರದಿಯನ್ನು ನೀಡಬೇಕು. ದಸರಾ ಕಾರ್ಯಕ್ರಮಗಳು ವರ್ಚುಯಲ್ ಆಗಿ ನಡೆಯಲಿ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಶೇ 20 ರಷ್ಟಿದ್ದ ಕೋವಿಡ್ ಪ್ರಕರಣಗಳನ್ನು ಕಳೆದ ವಾರಗಳಲ್ಲಿ ಶೇ 6 ಕ್ಕೆ ಇಳಿಸಲಾಗಿದೆ. ಇದನ್ನು ಇನ್ನಷ್ಟು ಕಡಿಮೆ ಮಾಡಿದಲ್ಲಿ ರಾಜ್ಯಕ್ಕೇ ಮಾದರಿಯಾಗಬಹುದು ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ:ಕೆ.ಸುಧಾಕರ್, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ,ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ , ಆರೋಗ್ಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.