ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ವೈದ್ಯರ ಕೊರತೆ ತೀವ್ರವಾಗಿದ್ದು, ಅವರಿಗೆ ಪಶು ಚಿಕಿತ್ಸೆಯ ಜವಾಬ್ದಾರಿ ನೀಡುವ ಬದಲು ಸಂಬಂಧವೇ ಇಲ್ಲದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ
ಹುದ್ದೆಗಳಿಗೆ ನಿಯೋಜನೆ ಮಾಡಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವ ಕೆಲ ಶಾಸಕರು, ತಾ.ಪಂ.ಗೆ ನಿಯೋಜಿಸಿರುವ ಪಶುವೈದ್ಯರು ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ಪಶುಸಂಗೋಪನೆ ಇಲಾಖೆಯು ಇತ್ತೀಚೆಗೆ 8 ಮಂದಿ ಪಶುವೈದ್ಯರನ್ನುತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳ ಹುದ್ದೆಗಳಿಗೆ ನಿಯೋಜಿಸಿಆದೇಶಿಸಿತ್ತು. ಈ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಒಪ್ಪಿಗೆನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಇಲ್ಲಿಗೆ ಸಾಕಷ್ಟು ಅನುದಾನ ಹರಿದು ಬರುತ್ತದೆ. ಈ ಹಿನ್ನೆಲೆಯಲ್ಲೇ ನಿಯೋಜನೆಗೆ ಒತ್ತಡಗಳು ಸಾಮಾನ್ಯ. ಈಗಲೂ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪರ್ಕಿಸದೆ ನಿಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಪಶುವೈದ್ಯರ ನಿಯೋಜನೆಯನ್ನು ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಖ್ ಸಹ ಒಪ್ಪಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.