ಮೈಸೂರು: ‘ರಾಜ್ಯದಲ್ಲಿ ಶೀಘ್ರವೇ 10,650 ಶಾಲಾ ಶಿಕ್ಷಕರ ನೇಮಕಾತಿ ಮಾಡಲು ಸಿದ್ಧತೆ ನಡೆದಿದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಕೊರತೆ ಇದೆ. ಇದನ್ನು ಗಮನಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹಣಕಾಸು ಇಲಾಖೆಯಿಂದ ವರ್ಷವೊಂದಕ್ಕೆ 10,650 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಅನುಮತಿ ಸಿಕ್ಕಿದೆ. ಹಾಗಾಗಿ, ಮೊದಲ ಹಂತದಲ್ಲಿ ನೇಮಕಾತಿಗಳು ಶೀಘ್ರವೇ ನಡೆಯಲಿವೆ. ಮುಂದಿನ ವರ್ಷಗಳಲ್ಲಿ ಮತ್ತಷ್ಟು ನೇಮಕಾತಿಗಳು ನಡೆಯಲಿವೆ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಗುಣಮಟ್ಟದ ಫಲಿತಾಂಶಕ್ಕೆ ಆದ್ಯತೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗಳು ಹಾಗೂ ವಿದ್ಯಾರ್ಥಿಗಳಿಗೆ ರ್ಯಾಂಕ್ ಘೋಷಿಸುವ ಪದ್ಧತಿಯನ್ನು ನಿಲ್ಲಿಸುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಿದರು.
‘ಗುಣಮಟ್ಟದ ಫಲಿತಾಂಶ ನಮಗೆ ಬೇಕಿದೆ. ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಕಾಪಿ ಮಾಡಿಸಿ ರ್ಯಾಂಕ್ ಪಡೆಯುವ ಅಗತ್ಯವಿಲ್ಲ ಎಂಬ ಸಂದೇಶ ರವಾನೆ ಮಾಡಬೇಕಿದೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.