ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರು ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದು ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ನಾಲ್ಕೂ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಬಿಜೆಪಿಯವರು ಜಂಭ ಕೊಚ್ಚಿಕೊಳ್ಳುತ್ತಿದ್ದರು. ಹಳೆ ಮೈಸೂರು ಭಾಗದಲ್ಲಿ ನಮ್ಮದೇ ಪ್ರಾಬಲ್ಯ ಎಂದು ಜೆಡಿಎಸ್ನವರು ಹೇಳುತ್ತಿದ್ದರು. ಎಲ್ಲವೂ ಈಗ ಸುಳ್ಳಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಜನರು ಸಜ್ಜಾಗಿರುವುದು ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ’ ಎಂದರು.
‘ಬಸವರಾಜ ಹೊರಟ್ಟಿ ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿದ್ದಾರೆ. ಆ ಕ್ಷೇತ್ರದಲ್ಲೂ ಕಾಂಗ್ರೆಸ್ ಒಳ್ಳೆಯ ಸ್ಪರ್ಧೆ ನೀಡಿದೆ. ದಕ್ಷಿಣ ಪದವೀಧರರ ಕ್ಷೇತ್ರ ಮತ್ತು ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು ದೊರಕಿದೆ. ನಾಲ್ಕರಲ್ಲಿ ಯಾವ ಕ್ಷೇತ್ರವೂ ನಮ್ಮ ಪಕ್ಷದ ಹಿಡಿತದಲ್ಲಿರಲಿಲ್ಲ. ಈಗ ಎರಡು ಕ್ಷೇತ್ರಗಳಲ್ಲಿ ಗೆದ್ದಿರುವುದು ಉತ್ತಮ ಬೆಳವಣಿಗೆ’ ಎಂದು ಹೇಳಿದರು.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ಗೆ ಮೊದಲೇ ಸೋಲಿನ ಭಯ ಇತ್ತು. ಈ ಕಾರಣಕ್ಕಾಗಿಯೇ ಕೆ.ಟಿ. ಶ್ರೀಕಂಠೇಗೌಡ ಸ್ಪರ್ಧಿಸಿರಲಿಲ್ಲ. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟವೇ ಪಕ್ಷದ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರ ಗೆಲುವಿಗೆ ಕಾರಣ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.