ಬೆಂಗಳೂರು: 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾಗಿ ತೊಂದರೆ ಅನುಭವಿಸುತ್ತಿರುವ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಒಂದು ಬಾರಿಗೆ ವರ್ಗಾವಣೆಗೆ ಅವಕಾಶ ಮಾಡಿಕೊಡುವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ ತಿದ್ದುಪಡಿಯ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ.
ಸೋಮವಾರ (ಏ. 26) ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು. ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರಿಂದ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಶೀಘ್ರದಲ್ಲಿಯೇ 2020–21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ವರ್ಗಾವಣೆಗೆ ನ. 11ರಂದು ಅಧಿಸೂಚನೆ ಹೊರಡಿಸಲಾಗಿತ್ತು. 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಆದರೆ, 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ವಿಷಯ ವರ್ಗಾವಣೆ ಕಾಯ್ದೆಯಲ್ಲಿ ಇರಲಿಲ್ಲವೆಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ, ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.