ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಸಿದ್ಧಪಡಿಸಿದ್ದು, ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಅದನ್ನು ಪ್ರಕಟಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಈ ಸಂಬಂಧ ಶಿಕ್ಷಣ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸಮಾಲೋಚನೆ ನಡೆಸಿ, ವೇಳಾಪಟ್ಟಿಗೆ ರೂಪುರೇಷೆ ನೀಡಿದ್ದಾರೆ.
ಶಿಕ್ಷಕರ ವರ್ಗಾವಣೆ ಕುರಿತಂತೆ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿರುವ ತಿದ್ದುಪಡಿ ಮಸೂದೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿದ್ದು, ನಿಯಮಾವಳಿಗಳು ಈಗಾಗಲೇ ಸಿದ್ಧಗೊಂಡಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ.ಎರಡು ವರ್ಷಗಳ ಹಿಂದೆ ವರ್ಗಾವಣೆಗಾಗಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೆಲವರು ನ್ಯಾಯಾಲಯ ಮೆಟ್ಟಿಲು ಹತ್ತಿದ ಕಾರಣ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಯಿತು. 2018 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜಕೀಯ ಅಸ್ಥಿರ ಸ್ಥಿತಿ ನಿರ್ಮಾಣ ಆಗಿದ್ದರಿಂದ ವರ್ಗಾವಣೆ ನಡೆದಿರಲಿಲ್ಲ. ಈ ಬಾರಿ ಶಿಕ್ಷಕರ ವರ್ಗಾವಣೆ ಮಾಡಿಯೇ ತೀರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.