ಬೆಂಗಳೂರು: ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ದೀಪಾವಳಿ ವೇಳೆಗೆ ಆರಂಭವಾಗಲಿದೆ.
‘ಶಿಕ್ಷಕರ ವರ್ಗಾವಣೆಗೆ ಎಲ್ಲ ಪೂರ್ವಭಾವಿ ಕ್ರಮಗಳು ಸಿದ್ಧಗೊಂಡಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ನೀತಿ ಸಂಹಿತೆ ಮುಕ್ತಾಯಗೊಂಡ ನಂತರ ವರ್ಗಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಬುಧವಾರ ತಿಳಿಸಿದರು.
‘ಪದವಿ ಪೂರ್ವ ಉಪನ್ಯಾಸಕರ ವರ್ಗಾವಣಾ ಕೌನ್ಸೆಲಿಂಗ್ಗೂ ನೀತಿ ಸಂಹಿತೆ ಅವಧಿ ಮುಗಿದ ತಕ್ಷಣವೇ ಪ್ರಾರಂಭಿಸಲಾಗುವುದು. ಅದಕ್ಕಿಂತ ಮೊದಲು, ಪ್ರಾಂಶುಪಾಲರ ಬಡ್ತಿ ಮತ್ತು ಅವರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಪ್ರಾಂಶುಪಾಲರ ವರ್ಗಾವಣೆಯಿಂದ ತೆರವಾಗುವ ಉಪನ್ಯಾಸಕ ಹುದ್ದೆಗಳನ್ನು ಒಳಗೊಂಡಂತೆ ಖಾಲಿಯಾಗುವ ಉಪನ್ಯಾಸಕರ ಹುದ್ದೆಗಳನ್ನು ಸೇರಿಸಿ ಉಪನ್ಯಾಸಕರ ವರ್ಗಾವಣಾ ಕೌನ್ಸೆಲಿಂಗ್ ಆರಂಭಿಸಲಾಗುವುದು’ ಎಂದು ಅವರು ವಿವರಿಸಿದರು.
ನ.10ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ನ.12ಕ್ಕೆ ನೀತಿ ಸಂಹಿತೆ ಅವಧಿ ಮುಕ್ತಾಯವಾಗಲಿದೆ. ನ.15ಕ್ಕೆ ಅಥವಾ ದೀಪಾವಳಿ ವೇಳೆಗೆ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.