ಬೆಂಗಳೂರು: ‘ಅನ್ಯ ಭಾಷಿಕರಿಗೆ ಕನ್ನಡ ಭಾಷೆ ಕಲಿಸಲು ಕಾರ್ಯಕ್ರಮ ರೂಪಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ‘ಕರ್ನಾಟಕ ಸರ್ಕಾರದ ಕನ್ನಡ ಕಾಯಕ’ ಕೃತಿಯನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಕನ್ನಡಿಗರು ಇತರ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆ ಕಲಿಯುತ್ತಾರೆ. ಅದೇ ರೀತಿ, ಬೆಂಗಳೂರಿನಲ್ಲಿರುವ ಕನ್ನಡೇತರರೂ ಕನ್ನಡ ಕಲಿಯುವಂತೆ ಆಗಬೇಕು’ಎಂದರು.
‘1983ರಲ್ಲಿ ಕನ್ನಡ ಕಾವಲು ಸಮಿತಿ ಎಂಬ ಹೆಸರಿನಲ್ಲಿ ಆರಂಭವಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದೆ. ಕನ್ನಡ ಭಾಷೆ ಕುರಿತಂತೆ ಇತರ ಸಂಸ್ಥೆಗಳ ಸಹಯೋಗದಿಂದ ವಿವಿಧ ಕಾರ್ಯಕ್ರಮಗಳನ್ನು ಪ್ರಾಧಿಕಾರ ರೂಪಿಸಬೇಕು’ ಎಂದು ಮುಖ್ಯಮಂತ್ರಿ ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮಾಹಿತಿ ನೀಡಿದರು. ಸಾಹಿತಿಗಳಾದ ದೊಡ್ಡರಂಗೇಗೌಡ, ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.