ADVERTISEMENT

ತಾಂತ್ರಿಕ ಶಿಕ್ಷಣ ಆಧಾರಿತ ಪ್ರೌಢಶಾಲೆ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 20:51 IST
Last Updated 5 ಅಕ್ಟೋಬರ್ 2021, 20:51 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ‘ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ಡೆನಿಸನ್ಸ್‌ ಹೋಟೆಲ್‌ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು 'ಇನ್ನೋವೇಷನ್ ಆ್ಯಂಡ್ ಇಂಪ್ಯಾಕ್ಟ್ ಹುಬ್ಬಳ್ಳಿ' ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.

‘1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು. ಮುಂದೆ ಅದು ಬಂದ್ ಆಯಿತು. ಮಕ್ಕಳಲ್ಲಿ ಗ್ರಹಿಸುವ ಸಾಮರ್ಥ್ಯ ಚೆನ್ನಾಗಿರುತ್ತದೆ. ಅವರಿಗೆ ಆ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವ ಕೆಲಸ ಮಾಡಲಾಗುವುದು’ ಎಂದರು.

ADVERTISEMENT

‘ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿವೆ. ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಬೆಂಗಳೂರು, ಪುಣೆ ಮುಂತಾದೆಡೆ ಆಗಿರುವ ಐಟಿ, ಬಿಟಿ ಕ್ರಾಂತಿಯಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ’ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾತನಾಡಿ,ಹುಬ್ಬಳ್ಳಿಯಲ್ಲಿ ಎ.ಐ. (ಕೃತಕ ಬುದ್ಧಿಮತ್ತೆ) ಮತ್ತು ಡಾಟಾ ಎಂಜಿನಿಯರಿಂಗ್‌ಗೆ ಸಂಬಂಧಿಸಿದಂತೆ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ ಕೇಂದ್ರವನ್ನು ಶೀಘ್ರವೇ ಸ್ಥಾಪಿಸಲಾಗುವುದು. ಸಾಫ್ಟ್‌ವೇರ್ ಪಾರ್ಕ್ ನಿರ್ಮಾಣಕ್ಕೆ 50 ಎಕರೆ ಜಮೀನು ಒದಗಿಸಲಾಗುವುದು ಎಂದು ಹೇಳಿದರು.

‘ಪ್ರೌಢಶಾಲೆ ಹಂತದಿಂದಲೇ ಕೋಡಿಂಗ್‌ ಕಲಿಸಲಾಗುವುದು. ಅದಕ್ಕೆ ಅಗತ್ಯವಿರುವ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.