ADVERTISEMENT

ನಾಡಿಗೆ ಕೇಡಿನ ಲಕ್ಷಣ: ದೇವನೂರ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 19:49 IST
Last Updated 2 ಜೂನ್ 2022, 19:49 IST
ದೇವನೂರ ಮಹಾದೇವ
ದೇವನೂರ ಮಹಾದೇವ   

ಬೆಂಗಳೂರು: ‘ಪರಿಷ್ಕೃತ ಪಠ್ಯಪುಸ್ತಕದ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ಅದನ್ನು ಕಾಲುಕಸ ಮಾಡಿ ಲೆಕ್ಕಿಸದೇ ಇರುವುದನ್ನು ನೋಡಿದರೆ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನಿಸುತ್ತವೆ’ ಎಂದುಸಾಹಿತಿ ದೇವನೂರ ಮಹಾದೇವ ಹೇಳಿದ್ದಾರೆ.

ತಮ್ಮ ಪಠ್ಯವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು,‘ನನ್ನ ಪಠ್ಯವನ್ನು ಕೈಬಿಡಬೇಕೆಂದು ವಿನಂತಿಸಿ ಪತ್ರ ಬರೆದ ಬಳಿಕವೂ ಅದನ್ನು ಪರಿಗಣಿಸದೇ ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ ಎಂದು ನೀವು ಹೇಳಿರುವುದು ದಬ್ಬಾಳಿಕೆ ಎನಿಸುತ್ತದೆ’ ಎಂದಿದ್ದಾರೆ.

‘ಕುವೆಂಪು ಮತ್ತು ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿಸಿದ್ದು ಸರಿಯಲ್ಲ. ಚಾತುರ್ವಣ್ಯ ವಿರೋಧಿಯಾಗಿದ್ದ ಬಸವಣ್ಣನವರ ಪಾಠವನ್ನು ಪರಿಷ್ಕರಣಾ ಸಮಿತಿಯು ಕತ್ತು ಹಿಚುಕಿರುವುದು ಹಾಗೂ ಒಕ್ಕೂಟ ವ್ಯವಸ್ಥೆಯ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜ ಬೇಕು ಎಂದು ಧ್ವನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನೇ ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೇ, ಈಗ ಸಮರ್ಥಿಸುತ್ತಿರುವುದು ಸರಿಯಾದ ನಡೆಯಲ್ಲ’ ಎಂದೂ ಅವರು ಆಕ್ಷೇಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.