ಬೆಂಗಳೂರು: ಪಠ್ಯಪುಸ್ತಕ ಮರುಪರಿಷ್ಕರಣೆ ಕೈಬಿಡಬೇಕು ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇದೇ 18ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ವಿವಿಧ ಸಂಘ–ಸಂಸ್ಥೆಗಳು ತೀರ್ಮಾನಿಸಿವೆ.
ರಾಜ್ಯ ಒಕ್ಕಲಿಗರ ಸಂಘ, ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿ, ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳನ್ನು ಒಳಗೊಂಡ ಸಂಚಾಲನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ನಂತರ ಸಮಾವೇಶ ನಡೆಯಲಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗುವುದು. ಚಿಂತಕರು, ಹೋರಾಟಗಾರರು, ಶಿಕ್ಷಣ ತಜ್ಞರು, ಮಠಾಧೀಶರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖಂಡರು ತಿಳಿಸಿದರು. ನಾಡಗೀತೆ ಹಾಗೂ ಕುವೆಂಪು ಅವರ ಬಗ್ಗೆ ಅಗೌರವದಿಂದ ರೋಹಿತ್ ಚಕ್ರತೀರ್ಥ ಅವರು ಲಘುವಾಗಿ ಮಾತನಾಡಿರುವುದು ದುರದೃಷ್ಟಕರ. ಅಧ್ಯಯನ, ಸಂಸ್ಕೃತಿಯೇ ಇಲ್ಲದಂತಹ ವ್ಯಕ್ತಿಯೊಬ್ಬರಿಗೆ ಸರ್ಕಾರ ಪಠ್ಯಪುಸ್ತಕ ರಚನಾ ಸಮಿತಿಯಲ್ಲಿ ಸ್ಥಾನ ನೀಡಿದ ಪರಿಣಾಮ ಇದಾಗಿದೆ ಎಂದು ಸಭೆಯಲ್ಲಿ ಹೋರಾಟಗಾರರು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.