ADVERTISEMENT

ಹೆದ್ದಾರಿ ಕಾಮಗಾರಿಗಳ ಆರಂಭ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 19:54 IST
Last Updated 28 ಏಪ್ರಿಲ್ 2020, 19:54 IST
ಗೋವಿಂದ ಎಂ. ಕಾರಜೋಳ
ಗೋವಿಂದ ಎಂ. ಕಾರಜೋಳ    

ಬೆಂಗಳೂರು: ‘ಕೊರೊನಾ ಹಿನ್ನೆಲೆಯಲ್ಲಿ ಗುರುತಿಸಿದ ರಾಜ್ಯದ ಕೆಂಪು ವಲಯ ಹೊರತುಪಡಿಸಿ ಉಳಿದ ವಲಯಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.

ಎಲ್ಲ ರಾಜ್ಯಗಳ ಲೋಕೋಪಯೋಗಿ ಮತ್ತು ಸಾರಿಗೆ ಸಚಿವರ ಜೊತೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಕಾರಜೋಳ, ‘ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ಮಹಾರಾಷ್ಟ್ರದ ಮಾದರಿಯಲ್ಲಿ ಸೇತುವೆಗಳ ಕೆಳಭಾಗದಲ್ಲಿ ಕಿರು ಅಣೆಕಟ್ಟು ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ‘ ಎಂದರು.

ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ ಸಲ್ಲಿಸಿರುವ 2020–21ನೇ ಸಾಲಿನ ₹ 8,100 ಕೋಟಿ ವೆಚ್ಚದ ಪ್ರಸ್ತಾವನೆಗಳನ್ನು ಶೀಘ್ರವಾಗಿ ಮಂಜೂರು ಮಾಡುವಂತೆಯೂ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ADVERTISEMENT

ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಅನುಸರಿಸಿ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಗಡ್ಕರಿಗೆ ಅವರು ಮಾಹಿತಿ ನೀಡಿದರು.

ಸಾರಿಗೆ ಸಂಸ್ಥೆಗಳ ಸ್ಥಿತಿಗತಿ, ಸಂಚಾರ ವ್ಯವಸ್ಥೆಯ ಕುರಿತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿವರಿಸಿದರು. ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೂ ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.