ಬೆಂಗಳೂರು: ಮಧ್ಯವಯಸ್ಸಿನ ಮಹಿಳೆಯೊಬ್ಬರ ಮೇಲೆ ತನ್ನ ಸಹಚರರಿಂದ ಕಣ್ಣೆದುರೇ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣದ ಮೊದಲ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇದೇ 3ರವರೆಗೆ ಬಂಧಿಸದಂತೆ ಜನಪ್ರತಿನಿಧಿಗಳ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.
ಈ ಕುರಿತ ಪ್ರಕರಣವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸಿ.ಎಸ್.ಪ್ರದೀಪ್, ‘ಆರೋಪಿ ಮುನಿರತ್ನ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತ ಕೇಸ್ ಡೈರಿ ಹಾಗೂ ಇತರೆ ದಾಖಲೆಗಳನ್ನು ಕೋರ್ಟ್ಗೆ ಹಾಜರು ಪಡಿಸಲು ಸಮಯಾವಕಾಶ ನೀಡಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಮುನಿರತ್ನ ಪರ ಹೈಕೋರ್ಟ್ ವಕೀಲ ಎಸ್.ಎಸ್.ಶ್ರೀನಿವಾಸ ರಾವ್ ಹಾಗೂ ಉಳಿದ ಆರೋಪಿಗಳ ಪರ ಪದಾಂಕಿತ ವಕೀಲ ಎಸ್.ಶ್ಯಾಮಸುಂದರ್, ‘ಮಧ್ಯಂತರ ಜಾಮೀನು ಅರ್ಜಿಯನ್ನು ಈಗಲೇ ಪರಿಗಣಿಸಬೇಕು’ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಸಂತ್ರಸ್ತೆಯ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು, ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಕಲಂ 438 (1)(4)ರ ಅಡಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ಪ್ರಾಸಿಕ್ಯೂಟರ್ಗೆ ನೋಟಿಸ್ ನೀಡುವ ಪೂರ್ವದಲ್ಲಿ ನ್ಯಾಯಾಲಯ ಮಧ್ಯಂತರ ಆದೇಶ ನೀಡಬಹುದಾಗಿದೆ. ಪ್ರಾಸಿಕ್ಯೂಟರ್ಗೆ ನೋಟಿಸ್ ನೀಡಿದ ನಂತರ ಯಾವುದೇ ಮಧ್ಯಂತರ ಆದೇಶ ನೀಡಲು ಕಾನೂನು ಅನುಮತಿಸುವುದಿಲ್ಲ’ ಎಂದು ತಕರಾರು ಸಲ್ಲಿಸಿದರು.
ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು, ‘ಆರೋಪಿ ತನಿಖೆಗೆ ಸಹಕರಿಸುವುದಾದರೆ ಅವರನ್ನು ಬಂಧಿಸುವುದಿಲ್ಲ‘ ಎಂಬ ಪ್ರಾಸಿಕ್ಯೂಷನ್ ಹೇಳಿಕೆಯನ್ನು ಪರಿಗಣಿಸಿ ‘ಇದೇ 3ರವರೆಗೆ ಆರೋಪಿಗಳನ್ನು ಬಂಧಿಸಬಾರದು’ ಎಂದು ಮಧ್ಯಂತರ ರಕ್ಷಣೆ ನೀಡಿ ವಿಚಾರಣೆಯನ್ನು ಮಂಗಳವಾರ (ಜೂನ್ 3) ಮಧ್ಯಾಹ್ನಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.