ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಹರ ಪಟ್ಟಿಯನ್ನು ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಶುಕ್ರವಾರ ಅಂತಿಮಗೊಳಿಸಿದೆ.
ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಈ ಬಾರಿ 65ನೇ ರಾಜ್ಯೋತ್ಸವವಾಗಿರುವ ಕಾರಣಕ್ಕೆ 65 ಮಂದಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಇನ್ನು ಒಂದೆರಡು ದಿನಗಳಲ್ಲಿ ಆಯ್ಕೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಪ್ರಕಟಿಸಲಿದ್ದಾರೆ. ಪ್ರಶಸ್ತಿ ಪ್ರದಾನ
ಕಾರ್ಯಕ್ರಮವನ್ನು ನವೆಂಬರ್ 1ರ ಬದಲಿಗೆ ಕೋವಿಡ್ ಅಬ್ಬರ ಕಡಿಮೆ ಆದ ಬಳಿಕವೇ ನಡೆಸಲು ತೀರ್ಮಾನಿಸಲಾಗಿದೆ. ಕೊರೊನಾ ವಾರಿಯರ್ಸ್ಗಳಿಗೆ ಪ್ರಶಸ್ತಿಯಲ್ಲಿ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ಸಿ.ಟಿ.ರವಿ, ‘ಈಗಾಗಲೇ ಸಾವಿರಾರು ಅರ್ಜಿಗಳು ಬಂದಿದ್ದವು. ಪ್ರತಿಯೊಂದನ್ನೂ ನಾನೇ ಪರಿಶೀಲಿಸಿದ್ದೇನೆ. ಒತ್ತಡ, ಪ್ರಭಾವಕ್ಕೆ ಒಳಗಾಗದೇ ಸಮಿತಿ ಅರ್ಹರನ್ನೇ ಆಯ್ಕೆ ಮಾಡಿದೆ. ವ್ಯಕ್ತಿಗಳ ಸಾಧನೆ ಜತೆಗೆ ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ’ ಎಂದು ಸಭೆಯಲ್ಲಿ
ತಿಳಿಸಿದರು.
ಪ್ರಶಸ್ತಿ ₹1 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.