ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಹಿಂದುಳಿದ ವರ್ಗಗಳ ಪಾತ್ರ ನಿರ್ಣಾಯಕ ಎಂದು ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸಪೂಜಾರಿ ಹೇಳಿದ್ದಾರೆ.
ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಇದಕ್ಕಾಗಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಕಠಿಣ ಪರಿಶ್ರಮ ಹಾಕಬೇಕು. ರಾಜ್ಯದ 50 ಸಾವಿರಕ್ಕೂ ಅಧಿಕ ಮತಗಟ್ಟೆ ಸಮಿತಿಗಳಲ್ಲಿ ಒಟ್ಟು 1.20 ಲಕ್ಷ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿನಿಧಿಗಳ ಪ್ರಾತಿನಿಧ್ಯ ಇರಬೇಕು ಎಂದು ಸಲಹೆ
ನೀಡಿದರು.
ಹಿಂದುಳಿದ ವರ್ಗಗಳಲ್ಲಿ ಒಟ್ಟು 800 ಕ್ಕೂ ಹೆಚ್ಚು ಉಪಜಾತಿಗಳಿವೆ. ಆ ಬಗ್ಗೆ ತಿಳಿದುಕೊಂಡು ಅವರನ್ನು ತಲುಪುವ ಜತೆಗೆ ಈ ಸಮುದಾಯಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕೃಷಿ ಮತ್ತು ಎಪಿಎಂಸಿ ಕಾಯ್ದೆಗಳಿಂದ ಆಗುವ ಉಪಯೋಗಳ ಬಗ್ಗೆ ರೈತರು ಮತ್ತು ಜನಸಾಮಾನ್ಯರಿಗೆ ತಿಳಿಸಿ ಹೇಳುವ ಕೆಲಸವನ್ನು ರೈತ ಮೋರ್ಚಾ ಕಾರ್ಯಕರ್ತರು ಮಾಡುತ್ತಿದ್ದು, ಹಿಂದುಳಿದ ವರ್ಗಗಳ ಮೋರ್ಚಾವೂ ಅದರಲ್ಲಿ ಕೈಜೋಡಿಸಬೇಕು ಎಂದು ಪೂಜಾರಿ
ತಿಳಿಸಿದರು.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ‘ಈ ಸಮಾಜದಲ್ಲಿ ಶೇ 60 ರಷ್ಟು ಜನ ಹಿಂದುಳಿದ ಸಮುದಾಯಕ್ಕೆ ಸೇರಿದವರು. ಎಲ್ಲರೂ ಒಗ್ಗಟ್ಟಾಗಿರಬೇಕು ಮತ್ತು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಶ್ರಮವಹಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ’ ಎಂದರು.
ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಮಾತನಾಡಿ, ‘ಬೂತ್ ಮಟ್ಟದಿಂದ ಹಿಡಿದು ಎಲ್ಲ ಹಂತಗಳಲ್ಲೂ ಹಿಂದುಳಿದ ಮೋರ್ಚಾವನ್ನು ಸದೃಢಗೊಳಿಸುವ ಕಾರ್ಯವನ್ನು ನಡೆಸುತ್ತಿದ್ದೇವೆ. ಜಿಲ್ಲಾ ಪ್ರವಾಸದ ಮೂಲಕ ಆ ಕಾರ್ಯವನ್ನು ಇನ್ನಷ್ಟು ವ್ಯಾಪಕಗೊಳಿಸಲಾಗುವುದು’ ಎಂದೂ ಅವರು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್
ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.