ADVERTISEMENT

ಕಲಬುರ್ಗಿ ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ಕೆಲವೇ ಗಂಟೆಗಳಲ್ಲಿ ರದ್ದು

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 16:23 IST
Last Updated 28 ಏಪ್ರಿಲ್ 2020, 16:23 IST
ಜಿಲ್ಲಾಧಿಕಾರಿ ಶರತ್ ಬಿ.
ಜಿಲ್ಲಾಧಿಕಾರಿ ಶರತ್ ಬಿ.    
""

ಕಲಬುರ್ಗಿ: ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಆದೇಶವನ್ನು ರದ್ದುಗೊಳಿಸಿದ ಪ್ರಹಸನ ಮಂಗಳವಾರ ನಡೆಯಿತು.

ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿತ್ತು. 2012ನೇ ಬ್ಯಾಚಿನ ಐಎಎಸ್‌ ಅಧಿಕಾರಿ ವಿಕಾಸ್ ಕಿಶೋರ್‌ ಸುರಳಕರ್ ಅವರನ್ನು ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿತ್ತು. ವರ್ಗಾವಣೆ ಆದೇಶ ಹೊರಡಿಸಿದ ಬೆನ್ನಲ್ಲೇ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಸರ್ಕಾರದ ಈ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿ ಸರಣಿ ಟ್ವೀಟ್‌ ಮಾಡಿದರು. ಅಧಿಕಾರಿಗಳ ವರ್ಗಾವಣೆಯಂತಹ ಸುಲಭ ಮಾರ್ಗದಿಂದ ಕೊರೊನಾ ನಿಯಂತ್ರಿಸಲು ಸಾಧ್ಯವಿಲ್ಲ. ಅಲ್ಲದೇ, ಇದರಿಂದ ಅಧಿಕಾರಿಗಳಲ್ಲಿ ತಪ್ಪು ಸಂದೇಶ ಹೋಗಲಿದೆ ಎಂದು ಎಚ್ಚರಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಜಿಲ್ಲಾಧಿಕಾರಿ ವರ್ಗಾವಣೆ ಸುದ್ದಿ ಸಾಕಷ್ಟು ಸದ್ದು ಮಾಡಿತು. ಹಲವು ಸಂಘಟನೆಗಳು ಖಂಡನಾ ಹೇಳಿಕೆಗಳನ್ನು ನೀಡಿದವು.

ADVERTISEMENT

‘ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿರುವ, ಕೊರೊನಾ ಸೋಂಕನ್ನು ನಿಯಂತ್ರಿಸಲು ನಿರಂತರವಾಗಿ ಶ್ರಮಿಸುತ್ತಿರುವ ಶರತ್ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ’ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೊರಹೊಮ್ಮಿದವು.

‘ಕೊರೊನಾ ಸೋಂಕು ತಡೆಗೆ ಆರಂಭದಲ್ಲಿ ಉತ್ಸುಕತೆಯಿಂದ ಕೆಲಸ ಮಾಡಿದ್ದ ಜಿಲ್ಲಾಧಿಕಾರಿ ಶರತ್‌, ಆ ನಂತರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ’ ಎಂಬ ಆರೋಪಗಳೂ ಕೆಲವರಿಂದ ಕೇಳಿ ಬಂದವು.

ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವರ್ಗಾವಣೆ ಆದೇಶಕ್ಕೆ ತಡೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.