ಬೆಂಗಳೂರು:‘ ಕಾಂಗ್ರೆಸ್ನಲ್ಲಿ ದಲಿತರು ಮುಖ್ಯಮಂತ್ರಿಯಾಗಲು ಅವಕಾಶವಿದೆ ಎಂಬ ನಂಬಿಕೆ ನನಗಿದೆ’ ಎಂದು ಕಾಂಗ್ರೆಸ್ ಶಾಸಕ ಡಾ.ಜಿ. ಪರಮೇಶ್ವರ ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಅವರು ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡುವಾಗ, ‘ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುವ ದಲಿತರು ಹುಚ್ಚರು’ ಎಂಬ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.
‘ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿರಬಹುದು. ನಮ್ಮ ಪಕ್ಷದ ಬಗ್ಗೆ ಅವರಿಗೆ ಏನು ಗೊತ್ತು? ಬಿಜೆಪಿಯ ಕುರಿತು ಮಾತ್ರ ಅವರಿಗೆ ತಿಳಿದಿದೆ. ಕಾಂಗ್ರೆಸ್ನಲ್ಲಿ ಎಲ್ಲರಿಗೂ ಅವಕಾಶಗಳಿವೆ’ ಎಂದರು.
ಇತಿಹಾಸ ತಿರುಚಬಾರದು: ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಯಾರು ಎಂಬುದು ಎಲ್ಲರಿಗೂ ಗೊತ್ತು. ಹೆಡಗೇವಾರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಕುರಿತು ನಾನು ಯಾವತ್ತೂ ಓದಿಲ್ಲ. ಈಗ ಇತಿಹಾಸವನ್ನು ತಿರುಚುವ ಕೆಲಸ ಮಾಡಬಾರದು’ ಎಂದು ಹೇಳಿದರು.
‘ಪಕ್ಷದ ಕುರಿತು ನನಗೆ ಯಾವುದೇ ಅಸಮಾಧಾನ ಇಲ್ಲ. ನಾಯಕರ ಮೇಲೂ ಸಿಟ್ಟು ಇಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಇತ್ತೀಚೆಗೆ ಕೆಲವು ಸಭೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಕ್ಷೇತ್ರ ಮತ್ತು ಜಿಲ್ಲೆಯಲ್ಲೇ ಹೆಚ್ಚು ಕೆಲಸ ಮಾಡುತ್ತಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ’ ಎಂದರು.
ಸಿದ್ದರಾಮಯ್ಯ ಮತ್ತು ತಮ್ಮ ಸಂಬಂಧ ತುಂಬಾ ಹಳೆಯದು. ಇಬ್ಬರ ನಡುವೆ ಯಾವುದೇ ರೀತಿಯ ವೈಮನಸ್ಸಿಲ್ಲ. ಅವರ ಭೇಟಿಯಲ್ಲೂ ವಿಶೇಷತೆ ಇಲ್ಲ. ಇತ್ತೀಚಿನ ಕೆಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.