ADVERTISEMENT

ಸಿದ್ದರಾಮೋತ್ಸವಕ್ಕೆ ಯಾವುದೇ ಆಕ್ಷೇಪಗಳಿಲ್ಲ: ಧ್ರುವನಾರಾಯಣ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 13:04 IST
Last Updated 14 ಜುಲೈ 2022, 13:04 IST
ಧ್ರುವನಾರಾಯಣ
ಧ್ರುವನಾರಾಯಣ   

ಮೈಸೂರು: ‘ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪಕ್ಷದಲ್ಲಿ ಯಾರಿಂದಲೂ ಆಕ್ಷೇಪ ವ್ಯಕ್ತವಾಗಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ದಾವಣಗೆರೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಆಚರಣಾ ಸಮಿತಿಯ ಉಪಾಧ್ಯಕ್ಷರಾಗಿ ಸಂಸದ ಡಿ.ಕೆ. ಸುರೇಶ್ ಅವರೇ ಇದ್ದಾರೆ. ಆರ್‌.ವಿ. ದೇಶಪಾಂಡೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಎಲ್ಲರನ್ನೂ ಒಳಗೊಳಿಸಿಕೊಂಡೇ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘ಪಕ್ಷದ ವರಿಷ್ಠ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಬಿಂಬಿಸುವ ಕಾರ್ಯಕ್ರಮವಿದು. ಮೈಸೂರಿನಲ್ಲಿ ಜುಲೈ 23ರಂದು ಸಿದ್ದರಾಮಯ್ಯ ಕುರಿತ ಕೃತಿಯನ್ನು ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ಆದ್ದರಿಂದ ಬಿಜೆಪಿ ಪಾಠ ಕಲಿಸಲು ಜನರು ನಿರ್ಧರಿಸಿದ್ದಾರೆ. ಯಾವಾಗ ಚುನಾವಣೆ ನಡೆದರೂ ನಮಗೆ ಬಹುಮತ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಚುನಾವಣೆ ಮುಗಿದ ಬಳಿಕವಷ್ಟೆ ಮುಖ್ಯಮಂತ್ರಿ ಸ್ಥಾನದ ಚರ್ಚೆ ಬರುತ್ತದೆ. ಪಕ್ಷ ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಮೊದಲ ಗುರಿ’ ಎಂದು ಪ್ರತಿಕ್ರಿಯಿಸಿದರು.

‘ಆರ್‌ಎಸ್‌ಎಸ್ ಆಳ ಮತ್ತು ಅಗಲ ಕೃತಿಯಲ್ಲಿ ದೇವನೂರ ಮಹಾದೇವ ಅವರು ವಾಸ್ತವಾಂಶ ಬಿಚ್ಚಿಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ–ಟಿಪ್ಪಣಿಗಳು ಸಹಜ. ಆದರೆ, ದೇವನೂರ ಸತ್ಯ ಬರೆದಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.