ಕೋಲಾರ: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ ಹುಟ್ಟೂರಾದ ಕ್ಯಾಸಂಬಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವು ಕಾಯಂ ವೈದ್ಯರಿಲ್ಲದೆ ರೋಗಗ್ರಸ್ತವಾಗಿದೆ.
ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿಯು ಹೋಬಳಿ ಕೇಂದ್ರವಾಗಿದ್ದು, ಸುಮಾರು 2 ಸಾವಿರ ಜನಸಂಖ್ಯೆ ಹೊಂದಿದೆ. ಕ್ಯಾಸಂಬಳ್ಳಿ ಜತೆಗೆ ಅಕ್ಕಪಕ್ಕದ 100ಕ್ಕೂ ಹೆಚ್ಚು ಹಳ್ಳಿಗಳ ಜನರು ವೈದ್ಯಕೀಯ ಸೇವೆಗೆ ಹೋಬಳಿ ಕೇಂದ್ರದ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ.
ಕ್ಯಾಸಂಬಳ್ಳಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಸುನಿಲ್ ಅವರು ಕೆಜಿಎಫ್ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು ಹೋದ ನಂತರ ಕಳೆದೊಂದು ವರ್ಷದಿಂದ ಈ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರಿಲ್ಲ. ಹೀಗಾಗಿ, ತಾಲ್ಲೂಕಿನ ಬೇರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರನ್ನು ದಿನಕ್ಕೊಬ್ಬರಂತೆ ಕ್ಯಾಸಂಬಳ್ಳಿ ಆಸ್ಪತ್ರೆಗೆ ನಿಯೋಜಿಸಲಾಗುತ್ತಿದೆ. ಆದರೆ, ಈ ವೈದ್ಯರು ಕಾರ್ಯ ಒತ್ತಡದ ಕಾರಣಕ್ಕೆ ಕ್ಯಾಸಂಬಳ್ಳಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ.
ಇದರಿಂದ ಕ್ಯಾಸಂಬಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಚಿಕಿತ್ಸೆಗಾಗಿ ಸುಮಾರು 10 ಕಿ.ಮೀ ದೂರದ ಕೆಜಿಎಫ್ ತಾಲ್ಲೂಕು ಕೇಂದ್ರದ ಆಸ್ಪತ್ರೆಗೆ ಹೋಗುವಂತಾಗಿದೆ. ಮತ್ತೊಂದೆಡೆ ಕ್ಯಾಸಂಬಳ್ಳಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸಹ ಇಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.