ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ವೇತನ ವಿಳಂಬವಾಗದಂತೆ ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಶಿಕ್ಷಕರ ವೇತನ ಪಾವತಿಗಾಗಿ ಜಿಲ್ಲಾ / ತಾಲ್ಲೂಕು ಪಂಚಾಯಿತಿಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಉಪನಿರ್ದೆಶಕರು ಜಿಲ್ಲಾ ಪಂಚಾಯಿತಿ ಸಿಇಒಗಳಿಂದ ಪ್ರಸ್ತಾವನೆ ಪಡೆದು ಕ್ರೋಡೀಕೃತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದರೆ ವೇತನ ವಿಳಂಬ ಆಗಲಾರದು ಎಂದು ಅವರು ಇಲಾಖೆಯ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈಚಿನ ದಿನಗಳಲ್ಲಿ ವೇತನ ವಿಳಂಬ ಎಂಬುದು ಸಾಮಾನ್ಯ ಸಂಗತಿಯಾಗಿದ್ದು, ರಾಜ್ಯದ ಹಲವಾರು ಕಡೆಗಳಲ್ಲಿ ಆಕ್ಷೇಪಗಳು ಕೇಳಿ ಬರುತ್ತಲೇ ಇವೆ. ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಗೆ ಒಳಪಟ್ಟ ಶಿಕ್ಷಕರ ಗೋಳು ಇನ್ನಷ್ಟು ಹೆಚ್ಚಿತ್ತು. ವೇತನ ವಿಳಂಬವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರೂ ಸೂಚನೆ ನೀಡಿದ್ದರು. ಅದರ ಫಲವಾಗಿ, ಡಿಡಿಪಿಐಗಳು ಸರಿಯಾಗಿ ಕಾರ್ಯನಿರ್ವಹಿಸಿದರೆ ವೇತನ ಪಾವತಿ ವಿಳಂಬವಾಗುವುದಿಲ್ಲ ಎಂಬ ಭರವಸೆಯನ್ನು ಪ್ರಧಾನ ಕಾರ್ಯದರ್ಶಿ ಅವರು ಈ ಸುತ್ತೋಲೆ ಮೂಲಕ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.