ಹಾಸನ: ‘ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ 10 ಕೆ.ಜಿ. ಅಕ್ಕಿ ಪೂರೈಸುವುದಕ್ಕೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಕಾರು ಹಾಗೂ ಇತರೆ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ತೀರ್ಮಾನಿಸಿಲ್ಲ’ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಹಿಂದಿನ ಸರ್ಕಾರ ತೀರ್ಮಾನಿಸಿತ್ತು. ಆ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದು, ಇಲಾಖೆಯ ಹಂತದಲ್ಲಿ ಪರಿಷ್ಕರಿಸಿದ ನಂತರ ತೀರ್ಮಾನಿಸಲಾಗುವುದು. 3 ಲಕ್ಷ ಮಂದಿ ಹೊಸದಾಗಿ ಕಾರ್ಡ್ಗೆ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ತಿಂಗಳೊಳಗೆ ವಿತರಿಸಲು ಸೂಚಿಸಲಾಗಿದೆ’ ಎಂದರು.
‘21 ಲಕ್ಷ ಬಿಪಿಎಲ್ ಪಡಿತರ ಚೀಟಿದಾರರಿಗೆ ಬ್ಯಾಂಕ್ ಖಾತೆ ಇಲ್ಲದೆ ಗೊಂದಲ ಏರ್ಪಟ್ಟಿತ್ತು, 7 ಲಕ್ಷ ಕಾರ್ಡ್ದಾರರ ಬ್ಯಾಂಕ್ ಖಾತೆ ತೆರೆದು ಜೋಡಣೆ ಮಾಡಲಾಗಿದೆ. ಉಳಿದ 14 ಲಕ್ಷ ಮಂದಿಯ ಬ್ಯಾಂಕ್ ಖಾತೆ ತೆರೆಯಲು ಸೂಚಿಸಲಾಗಿದೆ’ ಎಂದರು.
ಪರಿಶಿಷ್ಟ ಜಾತಿ ಪಂಗಡದ ಎಷ್ಟು ಮಂದಿ ಪಡಿತರ ಚೀಟಿದಾರರಿದ್ದಾರೆ ಎಂಬುದನ್ನು ಪರಿಶೀಲಿಸಲು ನ್ಯಾಯಬೆಲೆ ಅಂಗಡಿಯಲ್ಲಿ ಜಾತಿ ಪ್ರಮಾಣಪತ್ರ ಸಂಗ್ರಹಿಸಲು ತಿಳಿಸಲಾಗಿದೆ. ಆದರೆ ಅಕ್ಕಿ ವಿತರಣೆ ನಿಲ್ಲಿಸಲು ಹೇಳಿಲ್ಲ
-ಕೆ.ಎಚ್. ಮುನಿಯಪ್ಪ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.