ಬೆಂಗಳೂರು: ‘ಪದವಿಪೂರ್ವ ಕಾಲೇಜುಗಳಲ್ಲಿ ಅರ್ಹತೆ ಇರುವ ಉಪನ್ಯಾಸಕರಿಗೆ ತಮ್ಮ ಸೇವೆಯ ಅಂತಿಮ ಭಾಗದಲ್ಲಷ್ಟೇ ಬಡ್ತಿಗೆ ಅವಕಾಶ ಇದ್ದು, ಕೆಲವರು ನಿವೃತ್ತಿಯ ಅಂಚಿಗೆ ತಲುಪಿದ್ದರೂ ಆ ಅವಕಾಶ ದೊರೆತಿಲ್ಲ’ ಎಂದು ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಆರೋಪಿಸಿದೆ.
ಸಮಿತಿಯ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ
ಮೈ.ವಿ.ರವಿಶಂಕರ್ ಅವರು ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
‘ಬಡ್ತಿಯೇ ಇಲ್ಲದೆ ಕೆಲಸ ಮಾಡುವುದು ಶೈಕ್ಷಣಿಕ ವ್ಯವಸ್ಥೆಯ ಲೋಪವಾಗಿದೆ. ಇದನ್ನು ಸರಿಪಡಿಸುವ ಭರವಸೆಯನ್ನು ನೀಡಿದ ಮೇಲೆಯೂ ನಿರೀಕ್ಷಿತ ಮಟ್ಟದಲ್ಲಿ ಅದು ಈಡೇರುತ್ತಿಲ್ಲ. ಮೂವರು ಉಪನ್ಯಾಸಕರು ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ. ತಾವು ಅಧಿಕಾರಕ್ಕೆ ಬಂದ ಕೂಡಲೇ ಸಮಿತಿಯ ಒತ್ತಾಯವನ್ನು ಪರಿಗಣಿಸಿ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಾಂಶುಪಾಲ ಹುದ್ದೆಗೆ ಪದೋನ್ನತಿ ನೀಡುವ ಪ್ರಕ್ರಿಯೆಗೆ ಚಾಲನೆ ಕೊಟ್ಟು ನಿವೃತ್ತಿಯ ಅಂಚಿನಲ್ಲಿದ್ದ ಕೆಲವು ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಪದೋನ್ನತಿ ಕೊಡಿಸಿದ್ದೀರಿ. 340ಕ್ಕೂ ಅಧಿಕ ಉಪನ್ಯಾಸಕರಿಗೆ ಪದೋನ್ನತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.