ADVERTISEMENT

‘ಕೆಎಸ್‌ಆರ್‌ಟಿಸಿ ಖಾಸಗೀಕರಣ ಇಲ್ಲ’

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2018, 20:43 IST
Last Updated 29 ನವೆಂಬರ್ 2018, 20:43 IST

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು (ಕೆಎಸ್‌ಆರ್‌ಟಿಸಿ) ಖಾಸಗೀಕರಣ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಇಲ್ಲಿ ಗುರುವಾರ ಸ್ಪಷ್ಟಪಡಿಸಿದರು.

‘ಅಧಿಕಾರಿಗಳ ಮಟ್ಟದಲ್ಲಿ ನಿಗಮವನ್ನು ಖಾಸಗೀಕರಣ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ನಾನು ಸಹಿಸುವುದಿಲ್ಲ. ಆದರೆ, ಇಂತಹ ಪ್ರಯತ್ನಕ್ಕೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿಲ್ಲ. ಒಂದೇ ಒಂದು ಪ್ರತಿಭಟನೆಯೂ ನಡೆದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.‌

‘ಖಾಸಗೀಕರಣ ಮಾಡಿದರೆ ಸಾವಿರಾರು ನೌಕರರು ಕೆಲಸ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಒಂದು ವೇಳೆ ನೌಕರರ ಹಿತಕ್ಕೆ ಧಕ್ಕೆಯಾಗುವಂತಹ ವಾತಾವರಣ ಸೃಷ್ಟಿಯಾದರೆ ಮಂತ್ರಿ ಸ್ಥಾನದಿಂದ ನಿರ್ಗಮಿಸುತ್ತೇನೆ’ ಎಂದು ಹೇಳಿದರು.‌

ADVERTISEMENT

ನಿಗಮದ ಕೆಳ ಹಂತದಲ್ಲಿರುವ ನೌಕರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಣ್ಣ ತಪ್ಪಿಗೂ ಅಮಾನತಿನಂತಹ ಕ್ರೂರ ಶಿಕ್ಷೆ ವಿಧಿಸಲಾಗುತ್ತಿದೆ. ಆದರೆ, ಕೋಟ್ಯಂತರ ರೂಪಾಯಿ ಲಂಚ ತೆಗೆದುಕೊಂಡವರು ಆರಾಮವಾಗಿದ್ದಾರೆ ಎಂದು ಅವರು ಹೇಳಿದರು.

₹ 2 ಕೋಟಿ ಹಣ ಮೀಸಲಿಟ್ಟು ಅದರಲ್ಲಿ ಬರುವ ಬಡ್ಡಿ ಹಣದಲ್ಲಿ ಪ್ರತಿ ವರ್ಷ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸಾಧಕರಿಗೆ ಪ್ರಶಸ್ತಿ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.