ಬೆಂಗಳೂರು: ‘ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಿರುವುದರಿಂದ ಸಚಿವ ಸಂಪುಟ ಸಭೆ ನಡೆಸಲು ಯಾವುದೇ ಸಮಸ್ಯೆ ಇಲ್ಲ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ ಸ್ಪಷ್ಟಪಡಿಸಿದರು.
ನೀತಿ ಸಂಹಿತೆ ಇದ್ದರೂ ಆಂಧ್ರಪ್ರದೇಶದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಅಲ್ಲಿನ ಮುಖ್ಯಮಂತ್ರಿ ನಿರ್ಧರಿಸಿರುವುದು ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆಂಧ್ರಪ್ರದೇಶ ರಾಜ್ಯ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸಿಲ್ಲ’ ಎಂದರು.
‘ಚುನಾವಣಾ ಮಾದರಿ ನೀತಿ ಸಂಹಿತೆಯಲ್ಲಿರುವ ಬಹುತೇಕ ಎಲ್ಲ ಅಂಶಗಳಿಗೆ ಕರ್ನಾಟಕದಲ್ಲಿ ವಿನಾಯಿತಿ ನೀಡಲಾಗಿದೆ. ಹೀಗಾಗಿ ಟೆಂಡರ್ ಕರೆಯಲು, ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಗೆ ಅನುಮತಿ ನೀಡಲಾಗಿದೆ. ಬರ ಮತ್ತು ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತುರ್ತು ಕಾಮಗಾರಿ ಕೈಗೊಳ್ಳಲು ಅವಕಾಶವಿದೆ’ ಎಂದೂ ವಿವರಿಸಿದರು.
‘ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಸಿರುವ ಆಯೋಗದ ಕ್ರಮಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಆಕ್ಷೇಪಣೆಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದ್ದು, ಪರಿಶೀಲನೆಯಲ್ಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.