ADVERTISEMENT

ಸಂಪುಟ ಸಭೆ ಇಂದು: 22 ಸಾವಿರ ಶಿಕ್ಷಕರಿಗೆ ಬಡ್ತಿ?

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 19:32 IST
Last Updated 7 ಮಾರ್ಚ್ 2023, 19:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪದವಿ ಪೂರೈಸಿರುವ ಶೇ 40ರಷ್ಟು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಮಾರ್ಚ್‌ 8 ರಂದು ನಡೆಯುವ ಸಂಪುಟ ಸಭೆಯಲ್ಲಿ ಸಮ್ಮತಿ ಪಡೆಯಲಾಗುತ್ತಿದೆ.

ಪಿಯು ನಂತರ ಎರಡು ವರ್ಷಗಳ ಶಿಕ್ಷಣ ಡಿಪ್ಲೊಮಾ (ಡಿ.ಇಡಿ) ಪೂರೈಸಿದ ಅಭ್ಯರ್ಥಿಗಳು ಪ್ರಾಥಮಿಕ ಶಾಲೆಗಳಿಗೆ ನೇಮಕವಾಗಿದ್ದು, ಒಂದರಿಂದ ಏಳನೇ ತರಗತಿಗಳಿಗೆ ಪಾಠ ಮಾಡುತ್ತಿದ್ದಾರೆ. ಅವರಲ್ಲಿ 85 ಸಾವಿರಕ್ಕೂ ಹೆಚ್ಚು ಶಿಕ್ಷಕರು ಸೇವಾ ಅವಧಿಯಲ್ಲಿ ಪದವಿ ಶಿಕ್ಷಣ ಪೂರೈಸಿದ್ದಾರೆ. ಅಂತಹ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಸ್ಥಾನಕ್ಕೆ (ಆರರಿಂದ ಎಂಟನೇ ತರಗತಿ) ಬಡ್ತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

‘ಸಂಘದ ಮನವಿ ಪುರಸ್ಕರಿಸಿದ್ದ ಶಿಕ್ಷಣ ಇಲಾಖೆ ಶೇ 40 ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಕೊಳ್ಳಲು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಕಳುಹಿಸಿತ್ತು. ಆರ್ಥಿಕ ಇಲಾಖೆ ಸಮ್ಮತಿ ನೀಡಿದ್ದು, ಸಂಪುಟ ಸಭೆಯಲ್ಲಿ ಅನುಮತಿ ಪಡೆದು, ಮಾರ್ಚ್‌ 9 ರಿಂದಲೇ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆ ಇದೆ. ಇದರಿಂದ ಸುಮಾರು 22 ಸಾವಿರ ಶಿಕ್ಷಕರಿಗೆ ಬಡ್ತಿ ದೊರೆಯಲಿದೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.