ಬೆಂಗಳೂರು: ‘ನನ್ನನ್ನು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ. ಪಕ್ಷದಲ್ಲಿ ಯಾವುದೇ ಒಳ ಹೊಡೆತ ಆಗುವುದಿಲ್ಲ’ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕೆಂಬ ಬಯಕೆ ಹಾವೇರಿ– ಗದಗ ಕ್ಷೇತ್ರದ ಜನರಲ್ಲಿಯೂ ಇದೆ’ ಎಂದರು.
ಪುತ್ರನಿಗೆ ಟಿಕೆಟ್ ತಪ್ಪಿರುವುದರಿಂದ ಕೆ.ಎಸ್. ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಸುಮಾರು ಆರು ತಿಂಗಳಿಂದ ಆ ಕ್ಷೇತ್ರದಲ್ಲಿ ಅವರು ಓಡಾಡಿದ್ದಾರೆ. ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಟಿಕೆಟ್ ಕೊಡಬೇಕೆಂದು ಸಂಸದೀಯ ಮಂಡಳಿಗೆ ನಾನು ಮನವಿ ಮಾಡಿದ್ದೆ’ ಎಂದರು.
‘ಪಕ್ಷದ ರಾಷ್ಟ್ರೀಯ ನಾಯಕರು ಗೆಲುವಿನ ಲೆಕ್ಕಾಚಾರ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. ಈಶ್ವರಪ್ಪ ಅವರು ಹಿರಿಯರಿದ್ದಾರೆ. ಪಕ್ಷ ಅವರಿಗೆ ಸೂಕ್ತ ಗೌರವ ನೀಡುತ್ತದೆ ಎನ್ನುವ ವಿಶ್ವಾಸವಿದೆ. ಕುರುಬ ಸಮುದಾಯದೊಂದಿಗೆ ನನಗೆ ಉತ್ತಮ ಸಂಬಂಧ ಇದೆ’ ಎಂದರು.
‘ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದ ಗೌಡರು ಸ್ಪರ್ಧಿಸಬೇಕೆಂಬುದು ಅಲ್ಲಿನ ಕಾರ್ಯಕರ್ತರ ಅಭಿಪ್ರಾಯ ಇತ್ತು. ಅವರು ಮತ್ತು ಈಶ್ವರಪ್ಪ ಅವರಿಗೆ ಪಕ್ಷದ ರಾಷ್ಟ್ರೀಯ ನಾಯಕರು ಒಳ್ಳೆಯ ಅವಕಾಶ ನೀಡುವ ಸಾಧ್ಯತೆ ಇದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.