ADVERTISEMENT

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ– ಡಿ.ಕೆ. ಶಿವಕುಮಾರ್

ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 13:02 IST
Last Updated 20 ಜುಲೈ 2024, 13:02 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಕೆಲವು ಖದೀಮ ಅಧಿಕಾರಿಗಳಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ಅವಧಿಯಲ್ಲಿ ನಿಗಮಗಳಲ್ಲಿ ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಆ ಅವಧಿಯಲ್ಲಿದ್ದ ಅಧಿಕಾರಿಗಳು ಈಗ ಇದ್ದು, ‘ಡಿ’ ವರ್ಗದ ನೌಕರರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ನಾವು ಪರಿಶೀಲಿಸುತ್ತೇವೆ’ ಎಂದರು.

ಎಲ್ಲ ನಿಗಮಗಳ ಹಣವನ್ನು ಸರ್ಕಾರ ಹಿಂಪಡೆಯುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಿಗಮಗಳಲ್ಲಿ ಪಾರದರ್ಶಕತೆ ತರಲು ನಾವು ಮುಂದಾಗಿದ್ದೇವೆ. ನಿಗಮಗಳ ಅಧ್ಯಕ್ಷರುಗಳಿಗೆ ಈ ವಿಷಯ ಹೇಳಿದ್ದೇವೆ. ನಿಗಮಗಳನ್ನು ಆರ್ಥಿಕ ಇಲಾಖೆಯ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸರ್ಕಾರ ಮುಂದಾಗಿದೆ’ ಎಂದರು.

ADVERTISEMENT

ಜಿಲ್ಲಾ, ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ: ಪಕ್ಷದ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜೊತೆ ಡಿ.ಕೆ. ಶಿವಕುಮಾರ್‌ ಅವರು ಸೋಮವಾರ ಸಭೆ ನಡೆಸಿದರು. ಈ ಸಭೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬ್ಲಾಕ್ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ಪುನರ್ ರಚನೆ ಮಾಡಬೇಕಿದೆ. ಈಗ ಇರುವ ಅಧ್ಯಕ್ಷರು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಅವುಗಳಿಗೆ ತಯಾರಿ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲ ವಿಚಾರಗಳನ್ನು ಚರ್ಚಿಸಿ, ಮಾರ್ಗದರ್ಶನ ನೀಡಲು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿದೆ’ ಎಂದರು.

‘ಪಕ್ಷದಲ್ಲಿ ಸಕ್ರಿಯವಾಗಿ ಇಲ್ಲದವರನ್ನು ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲೂ ಈ ವಿಚಾರವನ್ನು ನಾನು ಹೇಳಿದ್ದೇನೆ. ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ, ಆದರೆ ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಅಧಿವೇಶನ ಮುಗಿದ ಬಳಿಕ ಇಬ್ಬರು ಸಚಿವರು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ’ ಎಂದರು.

ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ‘ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತರಕ್ಷಣೆ ಸಾಧ್ಯವಾಗುತ್ತಿದೆ’ ಎಂದು ಶಿವಕುಮಾರ್ ಹೇಳಿದರು.

‘2–3 ದಿನಗಳಲ್ಲಿ ಕೆಆರ್‌ಎಸ್‌ ಅಣೆಕಟ್ಟು ತುಂಬುವ ನಿರೀಕ್ಷೆಯಿದೆ. ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜೊತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನೂ ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದರು.

‘ಮುಂಜಾಗ್ರತಾ ಕ್ರಮವಾಗಿ ರಂಗನತಿಟ್ಟು ಸೇರಿದಂತೆ ಕೆಲವು ಕಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ’ ಎಂದರು.

ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ: ಮಳೆಯಿಂದ ಹಾನಿಗೆ ಒಳಗಾಗಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇರಿದಂತೆ ಇತರ ಕಡೆಗಳಿಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿ ಬಗ್ಗೆ ಕೇಳಿದಾಗ, ‘ಅನಾಹುತ ನಡೆದ ಒಂದೇ ತಾಸಿನಲ್ಲಿ ನಮ್ಮ ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಮ್ಮ ಸಚಿವರಾದ ಮಂಕಾಳ ವೈದ್ಯ, ಕೃಷ್ಣ ಬೈರೇಗೌಡರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ವಿಡಿಯೊ ಸಂವಾದ ಮೂಲಕ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ. ಕುಮಾರಸ್ವಾಮಿ ಭೇಟಿ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಈ ವಿಚಾರದಲ್ಲಿ ಈಗ ರಾಜಕಾರಣ ಮಾಡುವುದು ಬೇಡ. ಮೊದಲು ಜನರ ರಕ್ಷಣೆ ಮಾಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.