ಸಚಿವ ಎನ್. ಎಸ್. ಬೋಸರಾಜು
ಬೆಂಗಳೂರು: ‘ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗಿ ಅಭಿವೃದ್ದಿಗೊಳಿಸುವ ಕುರಿತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಪಿಲಿಕುಳ ನಿಸರ್ಗಧಾಮದಲ್ಲಿ ವಿಶಾಲವಾದ ಜಾಗವಿದ್ದು, ಅಂತರರಾಷ್ಟ್ರೀಯ ಮಟ್ಟದ ಜನಾಕರ್ಷಣೆಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಅವಕಾಶವಿದೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಮಿತಿಗೆ ಮುಖ್ಯಮಂತ್ರಿ ಈಗಾಗಲೇ ಅನುಮೋದನೆ ನೀಡಿದ್ದಾರೆ. ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ನೀಲಿ ನಕ್ಷೆಯ ಕುರಿತು ಚರ್ಚಿಸಲಾಗುವುದು. ಬಳಿಕ ಮುಂದಿನ ಬಜೆಟ್ನಲ್ಲಿ ಹಣ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಇದಕ್ಕೆ ಕನ್ಸಲ್ಟೆಂಟ್ ಏಜೆನ್ಸಿಯನ್ನು ನೇಮಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.
2025 ಜುಲೈನಲ್ಲಿ ಕ್ವಾಂಟಮ್ ಸಮಾವೇಶ: ‘2025ರ ಜುಲೈನಲ್ಲಿ ಎರಡು ದಿನ ಕ್ವಾಂಟಮ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ’ ಎಂದು ಸಚಿವರು ಹೇಳಿದರು.
‘ಕ್ವಾಂಟಮ್ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ದೇಶಗಳ ಜೊತೆ ಸಂಪರ್ಕದಲ್ಲಿದ್ದು, ಜ್ಞಾನ ವಿನಿಮಯದ ದೃಷ್ಟಿಯಿಂದ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಯವರ ನಿರ್ದೇಶನದಂತೆ ನಮ್ಮ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಉತ್ತೇಜಿಸುವುದು ಈ ಸಮಾವೇಶದ ಉದ್ದೇಶ’ ಎಂದರು.
‘ರಾಯಚೂರು, ಚಿಕ್ಕಮಗಳೂರು ಮತ್ತು ಯಾದಗಿರಿಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಲಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲು ಯೋಜಿಸಲಾಗಿರುವ ಸೈನ್ಸ್ ಸಿಟಿಗೆ ಅಗತ್ಯ ಭೂಮಿಯನ್ನು ಈಗಾಗಲೇ ಕೆಐಎಡಿಬಿ ನೀಡಿದೆ. ಇದರ ಸರ್ವೆ ಕಾರ್ಯ ಪೂರ್ಣಗೊಂಡಿರುವುದರಿಂದ ಡಿಪಿಆರ್ ತಯಾರಿಸಲು ಕೂಡಾ ನಿರ್ದೇಶನ ನೀಡಲಾಗಿದೆ’ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ರೂಪ್ ಕೌರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಸದಾಶಿವ ಪ್ರಭು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.