ನಾಯಕನಹಟ್ಟಿ: ಚಿತ್ರದುರ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗುರುತಿಪ್ಪೇರುದ್ರಸ್ವಾಮಿ ವಾರ್ಷಿಕ ಜಾತ್ರೆಯನ್ನು ರದ್ದುಪಡಿಸಲಾಗಿದೆ. ಸಾಂಪ್ರದಾಯಿಕ ಆಚರಣೆಗೆ ಜಾತ್ರೆ ಸೀಮಿತವಾಗಲಿದ್ದು, ಚಳ್ಳಕೆರೆ ತಾಲ್ಲೂಕು ಹೊರತುಪಡಿಸಿ ಉಳಿದೆಡೆಯ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪಟ್ಟಣದ ತಿಪ್ಪೇರುದ್ರಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಈ ನಿರ್ಧಾರ ಪ್ರಕಟಿಸಿದರು. ದೊಡ್ಡರಥೋತ್ಸವಮಾರ್ಚ್ 29ಕ್ಕೆ ನಿಗದಿಯಾಗಿತ್ತು.
‘ಎರಡನೇ ಹಂತದಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ದೊಡ್ಡ ರಥೋತ್ಸವ ಸೇರಿದಂತೆ ಜಾತ್ರೆಯನ್ನು ರದ್ದು ಮಾಡಲಾಗಿದೆ. ಆದರೆ, ಜಾತ್ರೆಯ ದಿನದಂದು ದೇವಾಲಯದಲ್ಲಿ ಎಲ್ಲ ಪೂಜಾ ವಿಧಿವಿಧಾನ, ಪೂಜಾ ಕೈಂಕರ್ಯಗಳು ನಡೆಯಲಿವೆ. ಜಾತ್ರೆಯ ದಿನ ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ನಾಯಕನಹಟ್ಟಿ ಪಟ್ಟಣಕ್ಕೆ ಪ್ರವೇಶ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
‘ಜಾತ್ರೆಯಲ್ಲಿ ವಸ್ತುಪ್ರದರ್ಶನ ಹಾಗೂ ಅಂಗಡಿ ತೆರೆಯಲು ಅವಕಾಶವಿಲ್ಲ. ವಿಶೇಷ ಸಾರಿಗೆ ಸೌಲಭ್ಯದ ವ್ಯವಸ್ಥೆ ಕಲ್ಪಿಸುವುದಿಲ್ಲ. ಇದಕ್ಕೆ ಭಕ್ತರು ಸಹಕರಿಸಬೇಕು. ಮನೆಗಳಲ್ಲಿ ಸುರಕ್ಷಿತವಾಗಿದ್ದು, ದೇವರ ಆರಾಧನೆ ಮಾಡಬೇಕು’ ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.