ಬೆಂಗಳೂರು: ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ಸೋಂಕು ಬೆಂಗಳೂರಿನ 34 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರಲ್ಲಿಭಾನುವಾರ ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ದಕ್ಷಿಣ ಆಫ್ರಿಕಾಕ್ಕೆ ತೆರಳಿ ಅಲ್ಲಿಂದ ಡಿ.1ರಂದು ಮರಳಿದ್ದ ಅವರಿಗೆ, ವಿಮಾನ ನಿಲ್ದಾಣದಲ್ಲಿ
ಆರ್ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು. ಸೋಂಕಿತರಾಗಿಲ್ಲ ಎಂಬ ವರದಿ ಬಂದಿದ್ದರಿಂದ
ವಿಮಾನ ನಿಲ್ದಾಣದ ಅಧಿಕಾರಿಗಳು ಮನೆಯಲ್ಲಿಯೇ ಪ್ರತ್ಯೇಕ ವಾಸಕ್ಕೆ ಸೂಚಿಸಿದ್ದರು. ಡಿ.2ರಂದು ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಆಗ ಸೋಂಕು ದೃಢಪಟ್ಟಿದ್ದರಿಂದ ಅವರ ಮಾದರಿಯನ್ನುವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಗೆ (ಜೀನೋಮ್ ಸೀಕ್ವೆನ್ಸಿಂಗ್) ಕಳುಹಿಸಲಾಗಿತ್ತು. ಆ ಪರೀಕ್ಷಾ ವರದಿಯಲ್ಲಿ ಹೊಸ ತಳಿಯ ಸೋಂಕು
ದೃಢಪಟ್ಟಿದೆ.
‘ಸೋಂಕಿತ ವ್ಯಕ್ತಿ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರಿಗೆ ಸೋಂಕಿನ ಲಕ್ಷಣಗಳು ಗೋಚರಿಸಿಲ್ಲ. ಅವರ ನೇರ ಸಂಪರ್ಕಕ್ಕೆ ಬಂದಿದ್ದ ಐವರನ್ನು ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದ 14 ಮಂದಿಯನ್ನು ಪತ್ತೆ ಮಾಡಿ, ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಯಾರೂ ಸೋಂಕಿತರಾಗಿಲ್ಲ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ. ತ್ರಿಲೋಕ ಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.
ಡಿ.2ರಂದು ರಾಜ್ಯದಲ್ಲಿ ಎರಡು ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು.ದಕ್ಷಿಣ ಆಫ್ರಿಕಾದ ಪ್ರಜೆ ಮತ್ತು ನಗರದ ವೈದ್ಯರೊಬ್ಬರಲ್ಲಿ ಸೋಂಕು ದೃಢಪಟ್ಟಿತ್ತು. ಅವರಿಬ್ಬರ ಸಂಪರ್ಕಕ್ಕೆ ಬಂದಿದ್ದ ಯಾರಲ್ಲೂ ಓಮೈಕ್ರಾನ್ ಸೋಂಕು ಕಂಡು ಬಂದಿರಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.