ತುಮಕೂರು: ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕೋರಿ ಪಕ್ಷದ ಹೈಕಮಾಂಡ್ಗೆ ಪತ್ರ ಬರೆಯಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೇಳಿಕೊಳ್ಳಲಾಗುವುದು. ಅಕ್ಟೋಬರ್ ಮೊದಲ ವಾರ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸುವ ಮುಖಂಡರನ್ನು ಒಳಗೊಂಡ ನಿಯೋಗವನ್ನು ಹೈಕಮಾಂಡ್ ಬಳಿಗೆ ಕರೆದುಕೊಂಡು ಹೋಗುವ ಬಗ್ಗೆ ಚಿಂತಿಸಲಾಗುವುದು’ ಎಂದು ತಿಳಿಸಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲಾ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹೋದರ ಸಂಸದ ಡಿ.ಕೆ.ಸುರೇಶ್ ವಿರುದ್ಧ ಹೇಳಿಕೆ ನೀಡುತ್ತಿಲ್ಲ. ಶಿವಕುಮಾರ್ ಉಪಮುಖ್ಯಮಂತ್ರಿ ಇದ್ದಾರೆ. ಇತರರಿಗೂ ಅವಕಾಶ ನೀಡಬೇಕು ಎಂಬುದು ತಮ್ಮ ವಾದವಾಗಿದೆ. ಅವಕಾಶ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್ಗೆ ಬರುವ ಬಗ್ಗೆ ಮಾಹಿತಿ ಇದೆ. ಮತ್ತೊಬ್ಬ ಮುಖಂಡ ವಿ.ಸೋಮಣ್ಣ ಪಕ್ಷಕ್ಕೆ ಬಂದು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಗಾಳಿ ಸುದ್ದಿ. ಜೆಡಿಎಸ್ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಪಕ್ಷಕ್ಕೆ ಬರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.