ಶಿವಮೊಗ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ನಾಯಕರ ಮನೆ ಎದುರು ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಶಿವಮೊಗ್ಗದ ನಿವಾಸಕ್ಕೂಬಿಗಿ ಭದ್ರತೆ ಕಲ್ಪಿಸಲಾಗಿದೆ.
ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಶಿವಮೊಗ್ಗದ ವಿನೋಬನಗರದ ಬಿಎಸ್.ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಮಾಹಿತಿ ಆಧರಿಸಿ ಅವರ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬುಧವಾರ ಬೆಳಿಗ್ಗೆಯಿಂದಲೇ ಹತ್ತಾರು ಪೊಲೀಸರು ಯಡಿಯೂರಪ್ಪ ಮನೆ ಎದುರು ಭದ್ರತೆ ಕೈಗೊಂಡಿದ್ದಾರೆ.
ಲೋಕಸಭೆ ಚುನಾವಣೆ ತಯಾರಿ ನೆಪದಲ್ಲಿ ಬಿಜೆಪಿ ಶಾಸಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದ್ದು, ನಂತರ ಅವರನ್ನು ಹರಿಯಾಣದ ಗುರುಗ್ರಾಮದ ಐಟಿಸಿ ಗ್ರ್ಯಾಂಡ್ ಭಾರತ್ ರೆಸಾರ್ಟ್ನಲ್ಲಿ ಇರಿಸಲಾಗಿದೆ. ಮೂರ್ನಾಲ್ಕು ದಿನಗಳಿಂದ ಶಾಸಕರು ಅಲ್ಲೇ ತಂಗಿದ್ದು, ಈ ಬೆಳವಣಿಗೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹರಿಯಾಣ ಸೇರಿದಂತೆ ವಿವಿದೆಡೆ ಪ್ರತಿಭಟನೆ ನಡೆಸಿದ್ದಾರೆ.
ಅಂತೆಯೇ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ನಾಯಕರ ಮನೆ ಎದುರು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮತ್ತೆ ಕೆಲವೆಡೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕರ ನಿವಾಸಗಳಿಗೆ ಭದ್ರತೆ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.