ADVERTISEMENT

ಟಿಪ್ಪು ಜಯಂತಿಗೆ ಮೈದಾನ ನಿರಾಕರಣೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 20:16 IST
Last Updated 6 ನವೆಂಬರ್ 2019, 20:16 IST
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಮುಡಾ ಕಚೇರಿ ಮುಂಭಾಗ ಬುಧವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಜತೆ ಮಾತನಾಡಿದರು
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಮುಡಾ ಕಚೇರಿ ಮುಂಭಾಗ ಬುಧವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಜತೆ ಮಾತನಾಡಿದರು   

ಮೈಸೂರು: ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನಿರಾಕರಿಸಿರುವುದನ್ನು ಖಂಡಿಸಿ, ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಬುಧವಾರ ರಾತ್ರಿ ನಗರದ ಮುಡಾ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದರು. ಸೌಹಾರ್ದ ಆಚರಣೆಗೆ ಅವಕಾಶ ಕೊಡದೆ, ಪ್ರಚೋದನಾಕಾರಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ಹರಿಹಾಯ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟುಹಿಡಿದರು.

ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಅಭಿರಾಂ ಶಂಕರ್‌, ಮನವೊಲಿಸಲು ಯತ್ನಿಸಿದರು. ಇದಕ್ಕೆ ಜಗ್ಗದ ಪ್ರತಿಭಟನಕಾರರು, ‘ಮೈದಾನದಲ್ಲಿ ಬಿಜೆಪಿ ಸಮಾವೇಶ ಹಾಗೂ ಮದುವೆ ನಡೆಸಲು ಅನುಮತಿ ನೀಡಿದ್ದೀರಿ. ನಮಗೆ ನಿರಾಕರಿಸಿದ ಹಿಂದಿನ ರಹಸ್ಯ ತಿಳಿಸಿ’ ಎಂದು ಒತ್ತಾಯಿಸಿದರು.

ADVERTISEMENT

ಸಿದ್ದರಾಮಯ್ಯ ಮಾತು ಕೇಳಿದರೆ ಮನೆಗೆ ಹೋಗ್ತೀರಿ: ಸೋಮಣ್ಣ
ಬಾಗಲಕೋಟೆ:
‘ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಸರ್ಕಾರದ ಆದೇಶ ಏನಿದೆಯೋ ಹಾಗೆ ಮಾಡಿ. ಮತ್ತೆ ಅದೇ ಸಿದ್ದರಾಮಯ್ಯನ ಮಾತೇ ಕೇಳ್ತೀನಿ ಅಂದ್ರೆ ರಜೆ ಹಾಕಿ ಮನೆಗೆ ಹೋಗ್ತೀರಿ...’

ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದವಸತಿ ಸಚಿವ ವಿ.ಸೋಮಣ್ಣ ಅವರು ತಮಗೆ ಮೈಸೂರಿನಿಂದ ಕರೆ ಮಾಡಿದ್ದ ಅಧಿಕಾರಿಯೊಬ್ಬರಿಗೆ ನೀಡಿದ ಎಚ್ಚರಿಕೆ ಇದು.

‘ಪೊಲೀಸರಿಗೂ ಇದನ್ನೇ ಹೇಳಿದ್ದೀನಿ. ಅವರು ನಿಮ್ಮ ಮೇಲೆ ಹೇಳ್ತಾರೆ’ ಅಂತ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸೋಮಣ್ಣ, ‘ಇಬ್ಬರೂ ಒಂದು ನಿಮಿಷ ಕುಳಿತು ಬಗೆಹರಿಸಿಕೊಳ್ಳಿ’ ಎಂದು ಕಿವಿಮಾತು ಹೇಳಿದರು.

‘ಕಾಂಗ್ರೆಸ್ ಕಚೇರಿಯಲ್ಲಿ ಜಯಂತಿ ಇಲ್ಲ’
ಮಂಗಳೂರು:
ಕಾಂಗ್ರೆಸ್‌ ಕಚೇರಿಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಿಸುವುದಿಲ್ಲ. ಆದರೆ, ಸಂಘ–ಸಂಸ್ಥೆಗಳು ಆಚರಿಸಿದರೆ ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪಾಲ್ಗೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಬುಧವಾರ ಮಹಾನಗರ ಪಾಲಿಕೆ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ‘ಈಗ ಸಾರ್ವಜನಿಕರು ಟಿಪ್ಪು ಜಯಂತಿ ಆಚರಿಸಬಹುದು ಎಂದು ಹೈಕೋರ್ಟ್‌ ಹೇಳಿದೆ. ಅಂತಹ ಕಾರ್ಯಕ್ರಮ ನಡೆದರೆ ಪಕ್ಷದ ಮುಖಂಡರು ಭಾಗವಹಿಸುತ್ತಾರೆ. ಪಕ್ಷದಿಂದ ಈ ರೀತಿಯ ಜಯಂತಿ ಆಚರಿಸುವ ಸಂಪ್ರದಾಯವಿಲ್ಲ’ ಎಂದರು.

‘ಗುರುವಾರ (ನ.7) ಮಧ್ಯಾಹ್ನ 12 ಗಂಟೆಯೊಳಗೆ ಮುಖ್ಯ ಕಾರ್ಯದರ್ಶಿ, ಸರ್ಕಾರದ ಅಡ್ವೋಕೇಟ್‌ ಜನರಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಟ್ಟಿಗೆ ಚರ್ಚಿಸಿ ತೀರ್ಮಾನ ತಿಳಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.