ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇಂದು (ಏ.16) ಮತ್ತು ನಾಳೆ (ಏ.17) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ.
ಅಭ್ಯರ್ಥಿಯ ಮುಖಚಹರೆ ಮತ್ತು ಕ್ಯೂಆರ್ ಕೋಡ್ ಮೂಲಕ ನೈಜತೆ ತಪಾಸಣೆಯ ನಂತರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡುವ ಕಾರಣ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಒಂದೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸೂಚಿಸಿದ್ದಾರೆ.
ಏ.16ರಂದು ಭೌತ ವಿಜ್ಞಾನ (ಬೆಳಿಗ್ಗೆ 10.30ರಿಂದ 11.50) ಮತ್ತು ರಸಾಯನ ವಿಜ್ಞಾನ (ಮಧ್ಯಾಹ್ನ 2.30ರಿಂದ 3.50) ಹಾಗೂ ಏ.17ರಂದು ಗಣಿತ (ಬೆಳಿಗ್ಗೆ 10.30ರಿಂದ 11.50) ಮತ್ತು ಜೀವ ವಿಜ್ಞಾನ (ಮಧ್ಯಾಹ್ನ 2.30ರಿಂದ 3.50) ವಿಷಯಗಳ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಯಲು ನೇಮಕಾತಿ ಪರೀಕ್ಷೆಗಳ ರೀತಿ ಸಿಇಟಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ವೆಬ್ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಲುಸ್ತುವಾರಿ ನಡೆಸಲಿದ್ದಾರೆ.
ಕನ್ನಡ ಪರೀಕ್ಷೆಗೆ 1,958 ಅಭ್ಯರ್ಥಿಗಳು ಹಾಜರ್:
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಮಂಗಳವಾರ ನಡೆದ ಕನ್ನಡ ಭಾಷಾ ಪರೀಕ್ಷೆಗೆ 1,958 ಅಭ್ಯರ್ಥಿಗಳು ಹಾಜರಾಗಿದ್ದರು.
ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಐದು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. 2,500 ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 542 ಅಭ್ಯರ್ಥಿಗಳು ಗೈರುಹಾಜರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.