ತುಮಕೂರು: ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರಗಳನ್ನು ಹೊರತುಪಡಿಸಿ, ಇತರೆಡೆ ಯಾರಿಗೆ ಬೆಂಬಲ ನೀಡಬೇಕು ಎಂಬ ಬಗ್ಗೆ ಭಾನುವಾರ ನಿರ್ಧಾರ ಪ್ರಕಟಿಸಲಾಗುವುದು ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.
ಯಾರಿಗೆ ಬೆಂಬಲ ನೀಡಬೇಕು ಎಂಬ ವಿಚಾರವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಲಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕೆಲವು ಸನ್ನಿವೇಶ, ಕ್ಷೇತ್ರಗಳ ಪರಿಸ್ಥಿತಿಯನ್ನು ನೋಡಿಕೊಂಡು ಸ್ಥಳೀಯ ಮಟ್ಟದಲ್ಲೂ ಯಾರಿಗೆ ಬೆಂಬಲ ನೀಡಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದು ಪ್ರಮುಖವಾಗುತ್ತದೆ. ಪಕ್ಷದ ಬೆಂಬಲಿಗರ ಮತಗಳು ಒಂದೆಡೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಈ ಎಲ್ಲಾ ಲೆಕ್ಕಾಚಾರಗಳ ಆಧಾರದ ಮೇಲೆ ಬೆಂಬಲಿಸಬೇಕಾಗುತ್ತದೆ ಎಂದು ತಿಳಿಸಿದರು.
ಜೆಡಿಎಸ್ ಬೆಂಬಲ ಇರುವ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಂಖ್ಯೆ ಕಡಿಮೆ ಇರುವ ಕಡೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ. ನಮ್ಮ ಶಕ್ತಿ ಇರುವ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದೇವೆ. ರಾಜ್ಯದ ಎಲ್ಲೆಡೆ ಚುನಾವಣೆ ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ. ಆದರೆ ಗೆಲ್ಲುವ ಶಕ್ತಿ ಇಲ್ಲ. ಹಾಗಾಗಿ ಎಲ್ಲೆಡೆ ಸ್ಪರ್ಧಿಸಿಲ್ಲ. ಅಂತಹ ಕಡೆಗಳಲ್ಲಿ ಯಾರಿಗಾದರೂ ಬೆಂಬಲ ಕೊಡುವುದು ಅನಿವಾರ್ಯವಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.