ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗೊಳ್ಳುತ್ತಿರುವುದರಿಂದ, ಪರಿಸ್ಥಿತಿ ಅವಲೋಕಿಸಲು ವಿಧಾನ ಮಂಡಲದ ಉಭಯ ಸದನಗಳ ಮುಖಂಡರು ಮತ್ತು ಆಡಳಿತ– ವಿರೋಧ ಪಕ್ಷಗಳ ನಾಯಕರ ಜೊತೆ ಮಂಗಳವಾರ (ಏ. 20) ವಿಡಿಯೊ ಸಂವಾದ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಸಂಜೆ 4.30ಕ್ಕೆ ನಡೆಯಲಿರುವ ಈ ವರ್ಚುವಲ್ ಸಭೆಯ ( ವಿಡಿಯೊ ಸಂವಾದ) ಅಧ್ಯಕ್ಷತೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ವಹಿಸಲಿದ್ದಾರೆ. ಕೋವಿಡ್ ತಗಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ, ಆಸ್ಪತ್ರೆಯಿಂದಲೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಭಾಗವಹಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಸಂಸದ ನಳಿನ್ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಜಿ. ಪರಮೇಶ್ವರ್, ಎಚ್.ಡಿ. ರೇವಣ್ಣ ಅವರಿಗೆ ಆಹ್ವಾನ ನೀಡಲಾಗಿದೆ. ಎಲ್ಲರೂ ವಿಡಿಯೊ ಲಿಂಕ್ ಮೂಲಕ ಸಭೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.