ಶಿವಾನಂದ ಪಾಟೀಲ
ಬೆಂಗಳೂರು: ‘ಬೆಂಬಲ ಬೆಲೆಯಡಿ ತೊಗರಿಯನ್ನು ಮೇ ಅಂತ್ಯದವರೆಗೆ ಖರೀದಿಸಲು ಅವಕಾಶ ನೀಡಲಾಗಿದೆ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಖರೀದಿ ಅವಧಿ ಮೇ 1 ಕ್ಕೆ ಮುಗಿದಿದೆ. ಖರೀದಿ ಪ್ರಮಾಣ ಇನ್ನೂ ನಿಗದಿ ಆಗದ ಕಾರಣ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದೆ. ಈವರೆಗೆ 1.83 ಲಕ್ಷ ಮೆಟ್ರಿಕ್ ಟನ್ ಖರೀದಿಸಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ಗೆ ಸಂಬಂಧಿಸಿದ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಸುಮಾರು 93 ಸಾವಿರ ಮೆಟ್ರಿಕ್ ಟನ್ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಪ್ರತಿ ಟನ್ಗೆ ₹7,550 ದರ ನಿಗದಿಪಡಿಸಿದೆ. ಇದನ್ನು ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರು ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು, ಅವರು ಸ್ಪಂದಿಸಿ ಪ್ರತಿ ಕ್ವಿಂಟಾಲ್ಗೆ ₹450 ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಪ್ರತಿ ಕ್ವಿಂಟಾಲ್ಗೆ ₹8,000 ನೀಡಿ ಖರೀದಿ ಮಾಡಲಾಗುತ್ತಿದೆ. ರೈತರು ಈ ಅವಕಾಶ ಬಳಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.