ಬೆಂಗಳೂರು: ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ವಾಪಸ್ ಹೋಗದಂತೆ ರಾಜ್ಯ ಸರ್ಕಾರ ತಡೆ ಹಿಡಿದಿಲ್ಲ. ಶುಕ್ರವಾರ ಮತ್ತು ಶನಿವಾರ ತಲಾ ಒಂದೊಂದು ರೈಲುಗಳು ಹೊರಡಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯ ಸರ್ಕಾರ ವಲಸೆ ಕಾರ್ಮಿಕರಿಗೆ ಹೋಗಲು ಬಿಡುತ್ತಿಲ್ಲ ಎಂದು ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಅದರಲ್ಲಿ ಹುರುಳಿಲ್ಲ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ನಾವು ಇಲ್ಲಿಂದ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ಮೊದಲು ಆ ರಾಜ್ಯಗಳು ಒಪ್ಪಿಗೆ ನೀಡಬೇಕು. ಆಗ ಮಾತ್ರ ರೈಲಿನಲ್ಲಿ ಕಳುಹಿಸಲು ಸಾಧ್ಯವಾಗುತ್ತದೆ. ಆದರೆ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕರಗಳು ಕಾರ್ಮಿಕರನ್ನು ಕಳುಹಿಸಬೇಡಿ ಎಂದು ಹೇಳಿರುವ ಕಾರಣ ಸಂಚಾರ ಸ್ಥಗಿತಗೊಳಿಸಲಾಯಿತು’ ಎಂದು ತಿಳಿಸಿದರು.
ಬೇರೆ ಬೇರೆ ರಾಜ್ಯಗಳಿಂದ ಅಲ್ಲಿಗೆ ವಲಸೆ ಕಾರ್ಮಿಕರು ದಿನವೂ ಸಾವಿರಾರು ಸಂಖ್ಯೆಯಲ್ಲಿ ಹೋಗುತ್ತಿದ್ದಾರೆ. ಅವರಿಗೆ ಆ ರಾಜ್ಯಗಳು ಕ್ವಾರೈಂಟೈನ್, ಆರೋಗ್ಯ ತಪಾಸಣೆ ಸೇರಿದಂತೆ ಹಲವು ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಸುಮ್ಮನೆ ಒಯ್ದು ಬಿಟ್ಟರೆ ಆಗುವುದಿಲ್ಲ. ಈ ಕಾರಣಕ್ಕಾಗಿ ಅವರು ಕಳುಹಿಸಬೇಡಿ ಎನ್ನುತ್ತಿದ್ದಾರೆ ಎಂದು ವಿವರಿಸಿದರು.
ಕಾಂಗ್ರೆಸ್ನವರು ಪರಿಸ್ಥಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.