ADVERTISEMENT

ವರ್ಗಾವಣೆ ಪ್ರಸ್ತಾವನೆ ಕಳಿಸಬೇಡಿ:ಸಿಎಂ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 19:30 IST
Last Updated 2 ಡಿಸೆಂಬರ್ 2022, 19:30 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆವರೆಗೂ ತಮ್ಮ ಸಚಿವಾಲಯಕ್ಕೆ ಮಂಡಿಸಬಾರದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಸಂಬಂಧ ಟಿಪ್ಪಣಿಯೊಂದನ್ನು ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕಳುಹಿಸಿದ್ದಾರೆ. ಇದರಿಂದ ವಾರ್ಷಿಕ ವರ್ಗಾವಣೆಗೂ ಮುನ್ನ ಕೆಲವು ಅಪರೂಪದ ಪ್ರಕರಣಗಳಲ್ಲಿ ಮುಖ್ಯಮಂತ್ರಿಯವರ ಅನುಮತಿ ಪಡೆದು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದವರಿಗೆ ಹಿನ್ನಡೆಯಾಗಲಿದೆ.

ಈಗ ವರ್ಷದ ಕೊನೆ ಆಗಿರುವುದರಿಂದ ವರ್ಗಾವಣೆಗೆ ಅರ್ಜಿ ತರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ಅನಗತ್ಯ ಸಮಸ್ಯೆ ಸೃಷ್ಟಿಯಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ADVERTISEMENT

ಈ ಮಧ್ಯೆ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು,  ಶಿಕ್ಷಕರೂ ವರ್ಗಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿಯವರ ಟಿಪ್ಪಣಿಯಿಂದ ಈ ವರ್ಷ ವರ್ಗಾವಣೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಶಿಕ್ಷಕರು ಸಿಲುಕಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಶಿಕ್ಷಕರೊಬ್ಬರು, ಕಳೆದ ಹತ್ತು ವರ್ಷಗಳಿಂದ ಒಂದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದರಿಂದ ಸಂತಸವಾಗಿತ್ತು. ಆದರೆ, ಮುಖ್ಯಮಂತ್ರಿಯವರ ಟಿಪ್ಪಣಿಯಿಂದ ಈ ವರ್ಷ (2022–23) ವರ್ಗಾವಣೆ ಆಗುವ ಬಗ್ಗೆ ಸಂದೇಹವಿದೆ ಎಂದರು.

ಶಿಕ್ಷಣ ಇಲಾಖೆ ಅಲ್ಲದೇ, ಕೆಲವು ದಿನಗಳ ಹಿಂದೆ ಅರಣ್ಯ ಮತ್ತು ಪರಿಸರ ಇಲಾಖೆಗೂ ಇಂತಹದ್ದೇ ಟಿಪ್ಪಣಿಯೊಂದನ್ನು ಮುಖ್ಯಮಂತ್ರಿ ಕಚೇರಿಯಿಂದ ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.