ADVERTISEMENT

ಮುಷ್ಕರ ಮುಂದುವರಿಸುವುದಿಲ್ಲ ಎಂದವರು ವರಸೆ ಬದಲಿಸಿದ್ದೇಕೆ: ಡಿಸಿಎಂ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 2:15 IST
Last Updated 14 ಡಿಸೆಂಬರ್ 2020, 2:15 IST
ಡಿಸಿಎಂ ಅಶ್ವತ್ಥ ನಾರಾಯಣ
ಡಿಸಿಎಂ ಅಶ್ವತ್ಥ ನಾರಾಯಣ    

ಬೆಂಗಳೂರು: ‘ಮುಷ್ಕರನಿರತ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು. ಅವರನ್ನು ದಿಕ್ಕು ತಪ್ಪಿಸುತ್ತಿರುವ ನಕಲಿ ನಾಯಕರಿಗೆ ತಕ್ಕ ಶಾಸ್ತಿ ಕಾದಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಕೋಡಿಹಳ್ಳಿ ಚಂದ್ರಶೇಖರ್‌ಗೆ ನೇರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಯಾವುದೇ ಕಾರಣಕ್ಕೂ ಮುಷ್ಕರ ಮುಂದುವರಿಸುವುದು ಸರಿಯಲ್ಲ. ಮುಖ್ಯಮಂತ್ರಿ ಮುಂದೆಯೇ ಮುಷ್ಕರ ವಾಪಸ್‌ ಪಡೆಯುವುದಾಗಿ ಒಪ್ಪಿಕೊಂಡು ಹೋದ ಮುಖಂಡರು, ಹೊರಗೆ ಹೋದ ಸ್ವಲ್ಪ ಹೊತ್ತಿನಲ್ಲೇ ವರಸೆ ಬದಲಿಸಿದ್ದು ಯಾಕೆ. ಅವರ ಹಿಂದೆ ಯಾರಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

‘ಕಾಣದ ಶಕ್ತಿಗಳು ನೌಕರರನ್ನು ದಾರಿ ತಪ್ಪಿಸುತ್ತಿದೆ. ರೈತ ನಾಯಕರ ಸೋಗಿನಲ್ಲಿದ್ದವರು ಇದ್ದಕ್ಕಿದ್ದ ಹಾಗೆ ಸಾರಿಗೆ ನೌಕರರ ಮುಖಂಡರಾಗಿದ್ದು ಹೇಗೆ. ಇದರಲ್ಲಿ ಅಡಗಿರುವ ಹಿತಾಸಕ್ತಿ ಏನು. ಮುಂದೆ ಕಾರ್ಮಿಕರನ್ನು ಬಿಟ್ಟು ಹಿಂದೆ ಯಾರೆಲ್ಲ ಆಟ ಆಡುತ್ತಿದ್ದಾರೆ. ಅವರ ದುರುದ್ದೇಶವೇನಿದೆ ಎಂಬುದು ಎಲ್ಲರಿಗೂ ಅರ್ಥವಾಗುತ್ತಿದೆ. ಸರ್ಕಾರಕ್ಕೂ ಈ ಬಗ್ಗೆ ಗೊತ್ತಿದೆ’ ಎಂದುಕೋಡಿಹಳ್ಳಿ ಚಂದ್ರಶೇಖರ್‌ ಮೇಲೆ ಉಪ ಮುಖ್ಯಮಂತ್ರಿ ಚಾಟಿ ಬೀಸಿದರು.

ADVERTISEMENT

‘ಮುಖ್ಯಮಂತ್ರಿಗಳು ಸಾಧ್ಯವಾಗುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಒಮ್ಮೆ ಹೇಳಿದರೆಂದರೆ ಬೇಡಿಕೆಗಳು ಕ್ಷಿಪ್ರಗತಿಯಲ್ಲಿ ಈಡೇರುತ್ತವೆ ಎಂಬುದು ಅನೇಕ ಸಲ ಸಾಬೀತಾಗಿದೆ’ ಎಂದರು.

‘ರಾಜ್ಯದ ಜನರು ಬಸ್‌ ಸೌಕರ್ಯವಿಲ್ಲದೆ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಈ ಬಿಕ್ಕಟ್ಟು ಮತ್ತೂ ಹೆಚ್ಚಾಗುವುದು ಬೇಡ. ಸಾರಿಗೆ ಸಿಬ್ಬಂದಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಅವುಗಳಲ್ಲಿ ಆರ್ಥಿಕ ಶಕ್ತಿಯ ಇತಿಮಿತಿಯೊಳಗೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಮಾತಿಗೆ ಓಗೊಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಮರಳಬೇಕು’ ಎಂದು ಮನವಿ ಮಾಡಿದರು.

‘ಸಾರಿಗೆ ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಗಮನವಿದೆ. ಸಹಾನುಭೂತಿಯೂ ಇದೆ. ಆದರೆ, ಜನರಿಗೆ ತೊಂದರೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಇನ್ನೂ ತೊಂದರೆ ಅನುಭವಿಸುವುದನ್ನು ನೋಡಿಕೊಂಡಿರಲು ಸಾಧ್ಯವಿಲ್ಲ’ ಎಂದೂ ಉಪ ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.