ADVERTISEMENT

ಸಾರಿಗೆ ನೌಕರರ ಮುಷ್ಕರ | ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಎಂ.ಚಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 21:41 IST
Last Updated 8 ಏಪ್ರಿಲ್ 2021, 21:41 IST
ಎಂ. ಚಂದ್ರಪ್ಪ
ಎಂ. ಚಂದ್ರಪ್ಪ   

ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ ಎಚ್ಚರಿಕೆ ನೀಡಿದರು.

ಇಲ್ಲಿ ಬುಧವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಸಾರಿಗೆ ನೌಕರರಿಗೆ ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಸೌಲಭ್ಯಗಳನ್ನು ನೀಡುವುದಿಲ್ಲ. ಸರ್ಕಾರಿ ನೌಕರರಿಗೆ ನೀಡುವಷ್ಟೇ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಲಾಗುತ್ತಿದೆ. 9 ಬೇಡಿಕೆಗಳಲ್ಲಿ 8 ಅನ್ನು ಈಡೇರಿಸಿದ್ದರೂ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಚೋದನೆಯಿಂದ ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಅವರ ಮಾತು ನಂಬಿ ಮುಷ್ಕರ ಮುಂದುವರಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತ ಸಂಘದಲ್ಲಿ ತಮ್ಮ ಮಾತು ನಡೆಯುವುದಿಲ್ಲ ಎಂದು ಇಲ್ಲಿಗೆ ಬಂದು ಸೇರಿಕೊಂಡಿದ್ದಾರೆ. ನೌಕರರು ಕೆಲಸ ಮಾಡುತ್ತಲೇ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಬೇಕೇ ವಿನಾ ಮುಷ್ಕರ ನಡೆಸಬಾರದು’ ಎಂದು ಅವರು ಹೇಳಿದರು.

ADVERTISEMENT

‘ಕೋವಿಡ್ ಸಂಕಷ್ಟದಲ್ಲೂ 1.30 ಲಕ್ಷ ಸಾರಿಗೆ ನೌಕರರಿಗೆ ವೇತನ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ₹ 1,780 ಕೋಟಿ ಬಿಡುಗಡೆ ಮಾಡಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಬಗ್ಗೆ ಸಾರ್ವಜನಿಕರೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೌಕರರ ಕ್ರಮವನ್ನು ಖಂಡಿಸುತ್ತಿದ್ದಾರೆ. ರಾಜ್ಯ ಸಾರಿಗೆ ನಿಗಮಕ್ಕೆ 107 ವರ್ಷಗಳ ಇತಿಹಾಸ ಇದೆ. ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆ ಎಂಬ ಮನ್ನಣೆ ಇದೆ. ಇದಕ್ಕೆ ಮಸಿ ಬಳಿಯುವ ಕೆಲಸ ಮಾಡಬಾರದು’ ಎಂದು ಚಂದ್ರಪ್ಪ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.